ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವ ಕ್ರಮವಾಗಿ ಟೆಲಿಗ್ರಾಮ್ ಆ್ಯಪ್ ಬಳಕೆಯನ್ನು ತಾತ್ಕಾಲಿಕವಾಗಿ ನಿಷೇಧಿಸುವ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಗುರುವಾರ ಪ್ರಶ್ನಿಸಿದ್ದು, ಅಂತಹ ಕ್ರಮಗಳು ಸಮಸ್ಯೆಯ ಮೂಲ ಕಾರಣವನ್ನು ಪರಿಹರಿಸುವುದಿಲ್ಲ ಎಂದು ಆರೋಪಿಸಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿದ ವಿಡಿಯೋ ಸಂದೇಶದಲ್ಲಿ, ಸಂದೇಶ ಕಳುಹಿಸುವ ವೇದಿಕೆಯನ್ನು ನಿಷೇಧಿಸುವುದು ಸಮಸ್ಯೆಗೆ ಪರಿಹಾರವಲ್ಲ ಮತ್ತು ಅಧಿಕಾರಿಗಳು ಸಮಸ್ಯೆಯನ್ನು ನಿಭಾಯಿಸುವ ಬಗ್ಗೆ ಗಂಭೀರವಾಗಿಲ್ಲ ಎಂದು ಹೇಳಿದ್ದಾರೆ.
'ಪ್ರಶ್ನೆ ಪತ್ರಿಕೆ ಸೋರಿಕೆ ವ್ಯವಹಾರವು ಕೋಟ್ಯಂತರ ರೂಪಾಯಿಗಳ ಮೌಲ್ಯದ್ದಾಗಿದೆ. ಅಂತಹ ಚಟುವಟಿಕೆಗಳ ಮೂಲಕ ಉತ್ಪತ್ತಿಯಾಗುವ ದೊಡ್ಡ ಮೊತ್ತದ ಹಣವು ಪ್ರಭಾವಿ ಜನರನ್ನು ತಲುಪುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯಿಂದ ಬರುವ ಹಣವನ್ನು ಶಾಸಕರ ಖರೀದಿ ಸೇರಿದಂತೆ ರಾಜಕೀಯ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ' ಎಂದು ಆರೋಪಿಸಿದರು.
ವ್ಯವಸ್ಥಿತ ಬದಲಾವಣೆಗಳನ್ನು ಪರಿಚಯಿಸದ ಹೊರತು ಪ್ರಶ್ನೆಪತ್ರಿಕೆ ಸೋರಿಕೆ ಮುಂದುವರಿಯುತ್ತದೆ ಮತ್ತು ಸುಧಾರಣೆಗಳನ್ನು ತರುವಂತೆ ಒತ್ತಾಯಿಸಲು ಜನರು ಒಗ್ಗೂಡಬೇಕು. ಇಡೀ ವ್ಯವಸ್ಥೆಯೇ ಬದಲಾಗಬೇಕಾಗುತ್ತದೆ' ಎಂದು ಅವರು ಹೇಳಿದರು.
ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2026 ಪ್ರಶ್ನೆಪತ್ರಿಕೆ ಲೀಕ್ ತಡೆಯಲು ವಿಫಲವಾಗಿದ್ದ ಮೋದಿ ಸರ್ಕಾರ, ಮೆಸೇಜಿಂಗ್ ಆ್ಯಪ್ ‘ಟೆಲಿಗ್ರಾಮ್’ ಅನ್ನು ಜೂನ್ 22 ರವರೆಗೆ ತಾತ್ಕಾಲಿಕವಾಗಿ ನಿಷೇಧಿಸಿದೆ.