ಹೈದರಾಬಾದ್: ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ನ ನಾಂಪಲ್ಲಿ ಕೋರ್ಟ್ ಶುಕ್ರವಾರ ಖ್ಯಾತ ನಟ ಅಲ್ಲು ಅರ್ಜುನ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಜೂನ್ 22, ಸೋಮವಾರದಂದು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಚಿಕ್ಕಡಪಲ್ಲಿ ಪೊಲೀಸರು ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು 11ನೇ ಆರೋಪಿ ಎಂದು ಹೆಸರಿಸಿದ್ದಾರೆ. ಸಂಧ್ಯಾ ಥಿಯೇಟರ್ನ ಆಡಳಿತ ಮಂಡಳಿಯನ್ನು 1 ರಿಂದ 10ನೇ ಆರೋಪಿಗಳನ್ನಾಗಿ ಮಾಡಲಾಗಿದೆ.
ಪ್ರಕರಣದಲ್ಲಿ 19 ಆರೋಪಿಗಳಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಆದರೆ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ 23 ವ್ಯಕ್ತಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಡಿಸೆಂಬರ್ 4, 2024 ರಂದು ಸಂಧ್ಯಾ ಥಿಯೇಟರ್ನಲ್ಲಿ ಪುಷ್ಪ 2ರ ವಿಶೇಷ ಪ್ರದರ್ಶನದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿತ್ತು. ಈ ಘಟನೆಯಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಅವರ ಮಗ ಶ್ರೀ ತೇಜ ಗಂಭೀರವಾಗಿ ಗಾಯಗೊಂಡಿದ್ದರು.
ಘಟನೆಯ ನಂತರದ ಇತ್ತೀಚಿನ ಬೆಳವಣಿಗೆಯಲ್ಲಿ, ಅಲ್ಲು ಅರವಿಂದ್ ಮತ್ತು ಅಲ್ಲು ಅರ್ಜುನ್ ಅವರ ಪತ್ನಿ ಸ್ನೇಹ ರೆಡ್ಡಿ ಅವರು ಬಾಲಕ ಶ್ರೀತೇಜ್ ಅವರ ಮನೆಗೆ ತೆರಳಿ ಅವರ ಕುಟುಂಬವನ್ನು ಭೇಟಿಯಾದರು. ಅವರು ಶ್ರೀತೇಜ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು. ಕುಟುಂಬದೊಂದಿಗೆ ಸಮಯ ಕಳೆದು, ಆರ್ಥಿಕ ಸಹಾಯದ ಭರವಸೆ ನೀಡಿದ್ದಾರೆ.