ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಸ್ರೇಲ್ ಪರವಾಗಿರುವ "ಕುರುಡು ಭಕ್ತಿ" ಭಾರತದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತಿದೆ ಎಂದು ಕಾಂಗ್ರೆಸ್ ಶನಿವಾರ ತೀವ್ರ ವಾಗ್ದಾಳಿ ನಡೆಸಿದೆ.
ಲೆಬನಾನ್ ಕುರಿತು ಇಸ್ರೇಲ್ನ ರಾಷ್ಟ್ರೀಯ ಭದ್ರತಾ ಸಚಿವರ ವಿವಾದಾತ್ಮಕ ಹೇಳಿಕೆಯ ಬಗ್ಗೆ ಕೇಂದ್ರ ಸರ್ಕಾರ ಮೌನ ವಹಿಸಿರುವುದನ್ನೂ ಪಕ್ಷ ಟೀಕಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಮೆರಿಕಾ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದವನ್ನು ಜಗತ್ತಿನ ಹೆಚ್ಚಿನ ದೇಶಗಳು ಎಚ್ಚರಿಕೆಯಿಂದ ಒಪ್ಪಿಕೊಂಡಿದ್ದರೂ, ಅದರ ಯಶಸ್ಸಿಗೆ ಪ್ರಮುಖ ಅಡೆತಡೆ ಇಸ್ರೇಲ್ನಿಂದಲೇ ಎದುರಾಗುತ್ತಿದೆ ಎಂದು ಹೇಳಿದ್ದಾರೆ.
"ಇಸ್ರೇಲ್ನ ರಾಷ್ಟ್ರೀಯ ಭದ್ರತಾ ಸಚಿವರು 'ಲೆಬನಾನ್ ಸಂಪೂರ್ಣವಾಗಿ ಸುಟ್ಟುಹೋಗಬೇಕು' ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದ್ದರೂ, ಮೋದಿ ಸರ್ಕಾರ ಮಾತ್ರ ಎಂದಿನಂತೆ ಮೌನವಾಗಿದೆ" ಎಂದು ಕಿಡಿಕಾರಿದ್ದಾರೆ.
ಮೋದಿ ಸರ್ಕಾರದ ವಿದೇಶಾಂಗ ನೀತಿ "ಮೊದಾನಿ ಸಾಮ್ರಾಜ್ಯದ" ಹಿತಾಸಕ್ತಿಗಳನ್ನು ರಕ್ಷಿಸುವ ಉದ್ದೇಶದಿಂದ ಪ್ರಭಾವಿತವಾಗುತ್ತಿದೆ ಎಂದು ಟೀಕಿಸಿದ್ದಾರೆ.
ಪ್ರಧಾನಿ ಮೋದಿಯವರು ಇಸ್ರೇಲ್ ಮೇಲಿನ ಕುರುಡು ಭಕ್ತಿ ದೇಶದ ಹಿತಾಸಕ್ತಿಗೆ ಹಾನಿ ಉಂಟುಮಾಡುತ್ತಿದೆ. ಆದರೆ, ಮೊದಾನಿ ಸಾಮ್ರಾಜ್ಯದ ಹಿತಾಸಕ್ತಿಗಳು ಮಾತ್ರ ರಕ್ಷಣೆ ಪಡೆಯುತ್ತಿವೆ" ಎಂದು ವ್ಯಂಗ್ಯವಾಡಿದ್ದಾರೆ.
ಇಸ್ರೇಲ್ನ ರಾಷ್ಟ್ರೀಯ ಭದ್ರತಾ ಸಚಿವ ಇಟಾಮರ್ ಬೆನ್ ಗ್ವಿರ್ ಅವರು, ನಾಲ್ವರು ಇಸ್ರೇಲಿ ಸೈನಿಕರ ಸಾವಿನ ಬಳಿಕ "ಲೆಬನಾನ್ ಸಂಪೂರ್ಣವಾಗಿ ಹೊತ್ತಿ ಉರಿಯಬೇಕು" ಎಂದು ಹೇಳಿಕೆ ನೀಡಿದ್ದರು.
ಈ ನಡುವೆಯೇ, ದಕ್ಷಿಣ ಲೆಬನಾನ್ನಲ್ಲಿ ತೀವ್ರಗೊಂಡಿದ್ದ ಸಂಘರ್ಷವನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ವರದಿಯಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಮಧ್ಯಂತರ ಒಪ್ಪಂದಕ್ಕೆ ಧಕ್ಕೆ ಉಂಟಾಗುವ ಆತಂಕದ ನಡುವೆ ಈ ಬೆಳವಣಿಗೆ ನಡೆದಿದೆ.
ಇರಾನ್ ಯುದ್ಧವನ್ನು ಕೊನೆಗೊಳಿಸಲು ಮಾಡಿಕೊಂಡಿರುವ ಮಧ್ಯಂತರ ಒಪ್ಪಂದದ ಪರಿಣಾಮವಾಗಿ ಹಾರ್ಮುಜ್ ಜಲಸಂಧಿ ಪುನರಾರಂಭಗೊಂಡಿದ್ದು, ಜಾಗತಿಕ ತೈಲ ಮತ್ತು ನೈಸರ್ಗಿಕ ಅನಿಲ ಸರಬರಾಜಿಗೆ ಮತ್ತೆ ಚೈತನ್ಯ ಬಂದಿದೆ. ಜೊತೆಗೆ ಇರಾನ್ನ ಅಣು ಕಾರ್ಯಕ್ರಮ ಕುರಿತ ಮಾತುಕತೆಗಳನ್ನು ಮರುಪ್ರಾರಂಭಿಸುವ ಪ್ರಕ್ರಿಯೆಯೂ ಆರಂಭವಾಗುವ ನಿರೀಕ್ಷೆಯಿದೆ.
ಆದರೆ, ಇಸ್ರೇಲ್ನ ಇತ್ತೀಚಿನ ಹೇಳಿಕೆಗಳು ಮತ್ತು ಲೆಬನಾನ್ನಲ್ಲಿ ಮುಂದುವರಿದಿರುವ ಉದ್ವಿಗ್ನತೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳಿಗೆ ಹೊಸ ಸವಾಲಾಗಿ ಪರಿಣಮಿಸಿದೆ. ಕಾಂಗ್ರೆಸ್ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದೆ.