ನವದೆಹಲಿ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಆರೋಪದ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆ ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಈ ಧರಣಿ ಶನಿವಾರ ಮಧ್ಯಾಹ್ನ ಆರಂಭವಾಗಿದ್ದು, ಪ್ರತಿಭಟನಾಕಾರರು ರಾತ್ರಿ ಪೂರ್ತಿ ಅಲ್ಲಿಯೇ ತಂಗಿ ಹೋರಾಟ ಮುಂದುವರಿಸಿದ್ದಾರೆ.
ಪ್ರತಿಭಟನೆ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಭಾಗವಹಿಸಿದವರಿಗೆ ಸ್ವಯಂಸೇವಕರು ಆಹಾರ ಮತ್ತು ಕುಡಿಯುವ ನೀರು ವಿತರಿಸುತ್ತಿರುವುದು ಕಂಡುಬಂದಿದೆ.
ಭಾನುವಾರ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಿ, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಹೋರಾಟಕ್ಕೆ ಸೇರುವಂತೆ ಮನವಿ ಮಾಡಿದರು.
ಭಾನುವಾರ ಜಂತರ್ ಮಂತರ್ನಲ್ಲಿ ಘೋಷಣೆಗಳು, ಭಾಷಣಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬೆಂಬಲಿಗರು ಚಪ್ಪಾಳೆ ತಟ್ಟಿ, ಡಫ್ಲಿ ಬಾರಿಸಿ ದೇಶಭಕ್ತಿ ಗೀತೆಗಳನ್ನು ಹಾಡಿದರು. ಸಂಜೆ ವೇಳೆಗೆ 200ಕ್ಕೂ ಹೆಚ್ಚು ಮಂದಿ ಸೇರಿದ್ದರು ಎಂದು ಆಯೋಜಕರು ಹೇಳಿದ್ದಾರೆ.
ನೀಟ್ ವಿವಾದದ ಬಗ್ಗೆ ಜವಾಬ್ದಾರಿಯ ಕೊರತೆಯಿದೆ ಎಂದು ಆರೋಪಿಸಿರುವ ದಿಪ್ಕೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಹಾಗೂ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂಬ ಬೇಡಿಕೆಯನ್ನೂ ಅವರು ಮುಂದಿಟ್ಟಿದ್ದಾರೆ.
ಪ್ರತಿಭಟನಾಕಾರರು ಸ್ಥಳದಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಸಾರ್ವಜನಿಕ ಶೌಚಾಲಯಗಳಿಗೆ ನೀರಿನ ಪೂರೈಕೆ ವ್ಯತ್ಯಯವಾಗಿದೆ ಎಂದು ಆರೋಪಿಸಿದರು. ಬಳಿಕ ಕುಡಿಯುವ ನೀರಿನ ವ್ಯವಸ್ಥೆ ಮರುಸ್ಥಾಪನೆಯಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ತಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಸಿಜೆಪಿ ಹೇಳಿದೆ. ರೈತ ಸಂಘಟನೆಗಳು ಕೂಡ ಪ್ರತಿಭಟನೆಗೆ ಸೇರುವ ಸಾಧ್ಯತೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ. ಪರಿಸ್ಥಿತಿ ಹಿನ್ನಲೆಯಲ್ಲಿ ಜಂತರ್ ಮಂತರ್ ಸುತ್ತಮುತ್ತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರತಿಭಟನೆ ಪ್ರದೇಶದ ಸುತ್ತ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಹಾಗೂ ಜವಾಬ್ದಾರಿತನದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಿಜೆಪಿ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಎರಡನೇ ಪ್ರತಿಭಟನೆ ಇದಾಗಿದೆ.