ಬಿಹಾರ: ಬಾಲಿವುಡ್ನ ಖ್ಯಾತ ನಟ ಪಂಕಜ್ ತ್ರಿಪಾಠಿ ಅವರ ಅಣ್ಣ ಬಿಜೇಂದ್ರ ನಾಥ್ ತಿವಾರಿ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಗಲು ಹೊತ್ತಿನಲ್ಲೇ ಕೊಡಲಿಯಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ.
ಈ ಆಘಾತಕಾರಿ ಘಟನೆ ಬಿಹಾರದ ಮಾಧೋಪುರದ ಬೆಲ್ಸಂದ್ ಗ್ರಾಮದಲ್ಲಿ ನಡೆದಿದ್ದು, ಸದ್ಯ ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಭೂವಿವಾದದ ಹಿನ್ನೆಲೆಯಲ್ಲಿ ಬಿಜೇಂದ್ರ ನಾಥ್ ತಿವಾರಿ ಅವರ ಮೇಲೆ ಈ ದಾಳಿ ನಡೆದಿರಬಹುದು ಎಂದು ಹೇಳಲಾಗಿದೆ. ಹಲ್ಲೆಯ ತಕ್ಷಣವೇ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಪ್ರಾಥಮಿಕ ಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದರಿಂದ, ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸದ್ಯ ಅವರನ್ನು ಪಾಟ್ನಾದ ದೊಡ್ಡ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈಗಾಗಲೇ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.