ನವದೆಹಲಿ: ಇರಾನ್–ಅಮೆರಿಕಾ–ಇಸ್ರೇಲ್ ದಾಳಿ-ಪ್ರತಿದಾಳಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ವಾತಾವರಣ ನಿರ್ಮಾಣವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲಿ ಸಂಭಾವ್ಯ ಹಿಂಸಾಚಾರದ ಬಗ್ಗೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಫೆ.28 ರಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ, ದೇಶದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ. ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಜಾಗರೂಕತೆಯಿಂದ ಇರಬೇಕು. ಅಶಾಂತಿಯನ್ನ ಪ್ರಚೋದಿಸುವ ಇರಾನ್ ಪರ ಮೂಲಭೂತ ಪ್ರಚಾರಕರನ್ನ ಪತ್ತೆ ಮಾಡಬೇಕು ಎಂದು ಸೂಚಿಸಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಕೂಟಗಳಲ್ಲಿ ಉದ್ರೇಕಿತ ಭಾಷಣಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ.
ಹೀಗಾಗಿ ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಎಚ್ಚರಿಕೆಯಿಂದಿರಬೇಕು. ಅಶಾಂತಿ ಮತ್ತು ಉದ್ವಿಗ್ನತೆ ಉಂಟು ಮಾಡುವ ಇರಾನ್ ಪರವಾದ ಮೂಲಭೂತ ಪ್ರಚಾರಕರನ್ನ ಗುರುತಿಸಿ ಮೇಲ್ವಿಚಾರಣೆ ಮಾಡಬೇಕು ಎಂದು ಎಚ್ಚರಿಸಿದೆ.
ಅಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಿಸಲು ಗುಪ್ತಚರ ಸಂಸ್ಥೆಗಳು ಭದ್ರತಾ ಸಂಸ್ಥೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಿ ಹೇಳಿದೆ.
ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮರಣದ ಬಗ್ಗೆ ಆಕ್ರೋಶ ಮತ್ತು ದುಃಖವನ್ನು ವ್ಯಕ್ತಪಡಿಸಲು ಶಿಯಾ ಮುಸ್ಲಿಮರು ಭಾನುವಾರ ಭಾರತದ ವಿವಿಧ ಭಾಗಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.