ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಟೀಕಿಸಿದ್ದ ಮಾಜಿ ಸಚಿವ ಯೋಗೇಂದ್ರ ಸಾವೊ ಅವರನ್ನು ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿಯು, ಮೂರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದೆ.
ಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಜಾರ್ಖಂಡ್ ಕಾಂಗ್ರೆಸ್ನ ರಾಜ್ಯ ಮಾಧ್ಯಮ ಉಸ್ತುವಾರಿ ರಾಕೇಶ್ ಸಿನ್ಹಾ ಅವರು ತಿಳಿಸಿದ್ದಾರೆ.
ಯೋಗೇಂದ್ರ ಸಾವೊ ಅವರು ಪಕ್ಷದ ಶಿಸ್ತು ಉಲ್ಲಂಘಿಸಿ ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಿದ್ದಾರೆ. ಗುರುವಾರ, ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಇದನ್ನು ಪಕ್ಷದ ಶಿಸ್ತು ಸಮಿತಿ ತೀವ್ರ ಗಂಭೀರವಾಗಿ ಪರಿಗಣಿಸಿದೆ.
ಯೋಗೇಂದ್ರ ಸಾಹು ಅವರು ಗುರುವಾರ ಫೇಸ್ಬುಕ್ ಲೈವ್ ಮೂಲಕ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಅವರು ಜಾರ್ಖಂಡ್ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದೆ ಎಂದು ಜಾರ್ಖಂಡ್ ಕಾಂಗ್ರೆಸ್ ನ ಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಓರಾನ್ ಅವರು ತಮ್ಮ ಆದೇಶದಲ್ಲಿ, ಕಾಂಗ್ರೆಸ್ ಪಕ್ಷವು ಪ್ರಸ್ತುತ ಜಾರ್ಖಂಡ್ ಸರ್ಕಾರದ ಭಾಗವಾಗಿದ್ದು, ಮುಖ್ಯಮಂತ್ರಿಯ ವಿರುದ್ಧ ನಿಂದನೀಯ ಭಾಷೆ ಬಳಸುವುದು ಕಾಂಗ್ರೆಸ್ ಪಕ್ಷದ ವಿರುದ್ಧವೇ ಹೇಳಿಕೆ ನೀಡಿದಂತೆ ಎಂದು ಹೇಳಿದ್ದಾರೆ.