ಮುಂಬಯಿ: ಅತ್ಯಾಚಾರ ಆರೋಪಿ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಜತೆಗೆ ನಂಟು ಹೊಂದಿರುವ ಆರೋಪದ ಮೇಲೆ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿರುವ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎನ್ಸಿಪಿ ಮಹಿಳಾ ವಿಭಾಗದ ಮುಖ್ಯಸ್ಥೆಯೂ ಆಗಿರುವ ಚಕಂಕರ್, ಉಪಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷೆ ಸುನೇತ್ರಾ ಪವಾರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ, ಅವರು ಶುಕ್ರವಾರ ಸಂಜೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ರಾಜೀನಾಮೆ ನೀಡುವಂತೆ ಅವರು ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ಚಕಂಕರ್ ಅವರು ಫಡಣವೀಸ್ಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 2024ರ ಅಕ್ಟೋಬರ್ 15 ರಂದು ಅವರನ್ನು ಈ ಹುದ್ದೆಗೆ (ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ) ನೇಮಕ ಮಾಡಲಾಗಿತ್ತು. ವೈಯಕ್ತಿಕ ಕಾರಣಗಳಿಂದ ನಾನು ಈ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ರಾಜ್ಯ ಸರ್ಕಾರ ಮತ್ತು ಸಹೋದ್ಯೋಗಿಗಳ ಸಹಕಾರಕ್ಕೆ ಧನ್ಯವಾದ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿ ಮಹಿಳೆಯರಿಗೆ ನೀರಿನಲ್ಲಿ ವಯಾಗ್ರ ಬೆರೆಸಿ ನೀಡುತ್ತಿದ್ದರು, ಇದು ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸುತ್ತದೆ ಎಂದು ಹೇಳಿ ನಂತರ ಅವರನ್ನು ಶೋಷಿಸುತ್ತಿದ್ದರು ಎಂದು ಸಾಮಾಜಿಕ ಕಾರ್ಯಕರ್ತೆ ಅಂಜಲಿ ದಮಾನಿಯಾ ಆರೋಪಿಸಿದ್ದಾರೆ. ಮಹಾರಾಷ್ಟ್ರದ ಅಧಿಕಾರ ವಲಯಗಳಲ್ಲಿ ಆ ವ್ಯಕ್ತಿಗೆ ಪ್ರಬಲ ಸಂಪರ್ಕವಿತ್ತು, ಇದು ಹಿಂದೆ ಹಲವಾರು ದೂರುಗಳಿದ್ದರೂ ಕ್ರಮ ಕೈಗೊಳ್ಳಲು ಅಡ್ಡಿಯಾಯಿತು ಎಂದು ಅವರು ಹೇಳಿದ್ದಾರೆ.