ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರ ಬುಧವಾರ ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದೆ ಎಂದು ಮೂಲಗಳು ತಿಳಿಸಿವೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಉಪಸ್ಥಿತರಿರುವ ನಿರೀಕ್ಷೆಯಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇರಳದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿರುವ ಕಾರಣ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ನಂತರ ಈಗ ಸರ್ವ ಪಕ್ಷ ಸಭೆ ಕರೆಯಲಾಗಿದೆ.
ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷದ ಪರಿಣಾಮವನ್ನು ನಿರ್ವಹಿಸಲು, ಇಂಧನ, ರಸಗೊಬ್ಬರ ಮತ್ತಿತರ ಕ್ಷೇತ್ರಗಳಲ್ಲಿ ಕಾರ್ಯತಂತ್ರಗಳನ್ನು ರೂಪಿಸಲು ಸರ್ಕಾರ ಏಳು ಸಶಕ್ತ ಗುಂಪುಗಳನ್ನು ರಚಿಸಿದೆ ಎಂದು ಹೇಳಿದರು.
ಲಭ್ಯವಿರುವ ಎಲ್ಲಾ ಮೂಲಗಳಿಂದ ಅನಿಲ ಮತ್ತು ಕಚ್ಚಾ ತೈಲವನ್ನು ಸಂಗ್ರಹಿಸಲು ಸರ್ಕಾರ ಕಾರ್ಯೋನ್ಮುಖವಾಗಿದೆ. ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತಪಡಿಸಿಕೊಳ್ಳಲು ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.
ಪ್ರಧಾನಿ ಹೇಳಿಕೆಯನ್ನು ಕಾಂಗ್ರೆಸ್ ಟೀಕಿಸಿದ್ದು, ಬಿಕ್ಕಟ್ಟಿನ ಕುರಿತು ಅವರ ಹೇಳಿಕೆಯು ಕಳೆದ 11 ವರ್ಷಗಳ ಸಾಧನೆಗಳಿಗಾಗಿ ಸ್ವಯಂ-ಪ್ರತಿಷ್ಠೆಯನ್ನು ಕೇಂದ್ರೀಕರಿಸಿದ ಸಿದ್ಧಪಡಿಸಿದ ಪಠ್ಯವಾಗಿದೆ ಎಂದು ಲೇವಡಿ ಮಾಡಿದೆ.