ಚೆನ್ನೈ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು, ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಹೇಳಿಕೆ ಸಾರ್ವಜನಿಕರಲ್ಲಿ ಅನಗತ್ಯ ಭೀತಿಯನ್ನು ಸೃಷ್ಟಿಸಿದೆ ಎಂದು ಬುಧವಾರ ಹೇಳಿದ್ದಾರೆ.
ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ತಮಿಳುನಾಡು ಸಿಎಂ ಸ್ಟಾಲಿನ್, ಪ್ರಸ್ತುತ ಪರಿಸ್ಥಿತಿಯನ್ನು COVID-19 ಪರಿಸ್ಥಿತಿಗೆ ಹೋಲಿಸಿರುವುದು ಈಗಾಗಲೇ LPG ಸಿಲಿಂಡರ್ಗಳ ಕೊರತೆಯಿಂದ ಬಳಲುತ್ತಿರುವ ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ ಎಂದು ಹೇಳಿದ್ದಾರೆ.
ಎಲ್ ಪಿಜಿ ಬಿಕ್ಕಟ್ಟು ದೈನಂದಿನ ಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ. ಅನೇಕ ರೆಸ್ಟೋರೆಂಟ್ಗಳು ಮುಚ್ಚಲ್ಪಟ್ಟಿವೆ ಮತ್ತು ಅನಿಲ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಕಾರ್ಮಿಕರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.
"ಇದು 'ಕೋವಿಡ್ ನಂತಹ ಪರಿಸ್ಥಿತಿ' ಎಂಬ ನಮ್ಮ ಪ್ರಧಾನಿಯವರ ಹೇಳಿಕೆಯು ಈಗಾಗಲೇ ಅನಿಲ ಕೊರತೆಯಿಂದ ಬಳಲುತ್ತಿರುವ ಜನರನ್ನು ಮತ್ತಷ್ಟು ಭಯಭೀತಗೊಳಿಸಿದೆ. ಹೆಚ್ಚಿನ ರೆಸ್ಟೋರೆಂಟ್ಗಳು ಮುಚ್ಚಲ್ಪಟ್ಟಿವೆ ಮತ್ತು ಕಾರ್ಮಿಕರು ತಮ್ಮ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ" ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು, ಈ ಸಮಸ್ಯೆಯನ್ನು ಪರಿಹರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಬದಲು, ಕೇಂದ್ರ ಸರ್ಕಾರ ಕ್ಷೇತ್ರ ವಿಂಗಡಣೆಯ ಕುರಿತು ಚರ್ಚೆಗಳ ಮೂಲಕ ಸಾರ್ವಜನಿಕ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಎಲ್ಪಿಜಿ ವಿತರಣೆ ಮತ್ತು ವಿದೇಶಾಂಗ ನೀತಿಯು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಒತ್ತಿ ಹೇಳಿದ ಸ್ಟಾಲಿನ್, ಸಮಸ್ಯೆಯನ್ನು ಪರಿಹರಿಸಲು ತಮಿಳುನಾಡು ಸರ್ಕಾರವು ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.