ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಜಂಗೀಪುರದಲ್ಲಿ ನಿನ್ನೆ ಶುಕ್ರವಾರ ಸಾಯಂಕಾಲ ರಾಮನವಮಿ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ನಡೆದಿದ್ದು ಸದ್ಯ ಪ್ರದೇಶದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಮೆರವಣಿಗೆಯ ವೇಳೆ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುಗಿ, ಎರಡೂ ಕಡೆಯವರು ಪರಸ್ಪರ ಕಲ್ಲು ತೂರಿಕೊಂಡು, ಪ್ರದೇಶದಲ್ಲಿನ ಆಸ್ತಿಪಾಸ್ತಿಗಳಿಗೆ ಹಾನಿ ಉಂಟುಮಾಡಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಸ್ಥಿತಿಯನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಅವರು ಉದ್ವಿಗ್ನ ಸ್ಥಿತಿಯಲ್ಲಿರುವ ಪ್ರದೇಶಗಳಲ್ಲಿ ಮಾರ್ಗ ಮೆರವಣಿಗೆ (Root March) ನಡೆಸಿ ನಿಗಾವಹಿಸುತ್ತಿದ್ದಾರೆ ಎಂದು ಹೇಳಿದರು.
ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಾಕಷ್ಟು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಶಾಂತಿ ಕಾಪಾಡಲು ಪೊಲೀಸರು ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ. ನಾವು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದೇವೆ, ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಇದೇ ವೇಳೆ, ಪ್ರದೇಶದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ನಿವಾಸಿಗಳು ಶಾಂತಿಯನ್ನು ಕಾಪಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.