ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವು ಜನಾದೇಶದ "ಕಳ್ಳತನ" ಎಂದು ಟೀಕಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಭಾರತೀಯ ಪ್ರಜಾಪ್ರಭುತ್ವವನ್ನು "ನಾಶಮಾಡುವ" ಕೇಸರಿ ಪಕ್ಷದ ಧ್ಯೇಯದಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಮಂಗಳವಾರ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಪಕ್ಷದ ಸೋಲಿನಿಂದ ಕೆಲವರು ಸಂತೋಷಪಡುತ್ತಿದ್ದಾರೆ. ಆದರೆ ಅವರು ಕ್ಷುಲ್ಲಕ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ನಾಯಕ ಒತ್ತಾಯಿಸಿದ್ದಾರೆ.
"ಕಾಂಗ್ರೆಸ್ನಲ್ಲಿ ಹಾಗೂ ಹೊರಗೆ ಕೆಲವರು ಟಿಎಂಸಿಯ ಸೋಲಿನ ಬಗ್ಗೆ ಸಂತೋಷಪಡುತ್ತಿದ್ದಾರೆ. ಅವರು ಇದನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಜನಾದೇಶದ ಕಳ್ಳತನವಾಗಿದೆ. ಈ ದೇಶದ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ನಾಶಮಾಡಲು ಪಣ ತೊಟ್ಟಿರುವ ಬಿಜೆಪಿಯ ಪ್ರಯತ್ನದ ಒಂದು ದೊಡ್ಡ ಹೆಜ್ಜೆಯಾಗಿದೆ" ಎಂದು ರಾಹುಲ್ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
"ಕ್ಷುಲ್ಲಕ ರಾಜಕೀಯವನ್ನು ಬದಿಗಿಡಿ. ಇದು ಒಂದು ಪಕ್ಷ ಅಥವಾ ಇನ್ನೊಂದು ಪಕ್ಷದ ಬಗ್ಗೆ ಅಲ್ಲ. ಇದು ಭಾರತದ ಬಗ್ಗೆ" ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ನಿಲ್ಲುವುದಾಗಿ ಹೇಳಿದ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದಲ್ಲಿ "100ಕ್ಕೂ ಹೆಚ್ಚು ಸ್ಥಾನಗಳನ್ನು ಕದ್ದಿದ್ದಾರೆ" ಎಂದು ಆರೋಪಿಸಿದ್ದಾರೆ.
"ಬಿಜೆಪಿ ಚುನಾವಣಾ ಆಯೋಗದ ಬೆಂಬಲದೊಂದಿಗೆ ಚುನಾವಣೆಯನ್ನು ಗೆದ್ದಿದೆ. ಮಮತಾ ಜಿ ಅವರ ಮಾತನ್ನು ನಾವು ಒಪ್ಪುತ್ತೇವೆ. ಬಂಗಾಳದಲ್ಲಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಕದ್ದಿದ್ದಾರೆ" ಎಂದು ರಾಹುಲ್ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಧ್ಯಪ್ರದೇಶ, ಹರಿಯಾಣ, ಮಹಾರಾಷ್ಟ್ರ ಮತ್ತು 2024 ರ ಸಾರ್ವತ್ರಿಕ ಚುನಾವಣೆಯನ್ನು ಉಲ್ಲೇಖಿಸಿ, ಹಿಂದಿನ ಚುನಾವಣೆಗಳಲ್ಲಿ ಇದೇ ರೀತಿ ಆಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಮಮತಾ ಬ್ಯಾನರ್ಜಿ ಕೂಡ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಬಿಜೆಪಿ "100 ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ" ಮತ್ತು ಚುನಾವಣಾ ಆಯೋಗವನ್ನು "ಬಿಜೆಪಿಯ ಆಯೋಗ" ಎಂದು ಟೀಕಿಸಿದ ನಂತರ ರಾಹುಲ್ ಗಾಂಧಿ ಈ ಈ ಹೇಳಿಕೆ ನೀಡಿದ್ದಾರೆ.