ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಸಚಿವ ಸಂಪುಟ ಸಭೆಯಲ್ಲೇ ಗಡಿ ಭದ್ರತೆಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾರತ–ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಫೆನ್ಸಿಂಗ್ ಕಾರ್ಯಕ್ಕೆ ಗಡಿ ಭದ್ರತಾ ಪಡೆ (ಬಿಎಸ್ಎಫ್)ಗೆ ಭೂಮಿ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ.
ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು, ಅಂತರಾಷ್ಟ್ರೀಯ ಗಡಿಯಲ್ಲಿ ಬೇಲಿ ನಿರ್ಮಾಣಕ್ಕಾಗಿ ಸುಮಾರು 105 ಎಕರೆ ಭೂಮಿಯನ್ನು ಕೇಂದ್ರಕ್ಕೆ ವರ್ಗಾಯಿಸಲು ಒಪ್ಪಿಗೆ ನೀಡಲಾಗಿದ್ದು,ಈ ಪ್ರಕ್ರಿಯೆಯು ಮೇ 11 ರಿಂದ ಪ್ರಾರಂಭವಾಗಿ 45 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.
ಗಡಿ ಪ್ರದೇಶದಲ್ಲಿ ಅಕ್ರಮ ನುಸುಳುಕೋರರ ತಡೆ ಹಾಗೂ ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಂತ ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಪ್ರಕ್ರಿಯೆ ವಿಳಂಬಗೊಂಡಿತ್ತು ಎಂದು ಆರೋಪಿಸಿದ ಅವರು, ಈಗಿನ ಸರ್ಕಾರ ಗಡಿ ಭದ್ರತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮೊದಲ ಸಂಪುಟ ಸಭೆಯಲ್ಲೇ ಕೇಂದ್ರ ಸರ್ಕಾರದ ಹಲವು ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆ 3.0 ಸೇರಿದಂತೆ ಇತರ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ವಯೋಮಿತಿಯಲ್ಲಿ ಐದು ವರ್ಷಗಳ ಸಡಿಲಿಕೆ ನೀಡುವ ನಿರ್ಧಾರಕ್ಕೂ ಸಂಪುಟ ಒಪ್ಪಿಗೆ ನೀಡಿದೆ.
ರಾಜ್ಯದಲ್ಲಿ ಭಾರತೀಯ ನ್ಯಾಯ ಸಂಹಿತೆಯನ್ನು (BNS) ಜಾರಿಗೆ ತರಲು ಮತ್ತು ಜೂನ್ 2025 ರ ಜನಗಣತಿ ಪ್ರಕ್ರಿಯೆಯನ್ನು ತಕ್ಷಣವೇ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.
ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ ಸೇರಿದಂತೆ ಕೇಂದ್ರದ ಕಾನೂನುಗಳನ್ನು ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ತರಲು ಸಹ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಮುಂದಿನ ಸಚಿವ ಸಂಪುಟ ಸಭೆ ಮುಂದಿನ ವಾರ ನಡೆಯಲಿದೆ ಎಂದು ತಿಳಿಸಿದರು.