ಲಖಿಂಪುರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದ ಕಾರಣ ಗಂಗೋತ್ರಿನಗರ ಪ್ರದೇಶದ ತನ್ನ ಮನೆಯಲ್ಲಿ 21 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರಿತಿಕ್ ಮಿಶ್ರಾ ಅವರು ಮೂರನೇ ಬಾರಿ ನೀಟ್ ಪರೀಕ್ಷೆ ಬರೆದಿದ್ದರು ಮತ್ತು ಈ ಬಾರಿ ತೇರ್ಗಡೆಯಾಗುವ ವಿಶ್ವಾಸವಿತ್ತು ಎಂದು ಅವರ ತಂದೆ ಹೇಳಿದ್ದಾರೆ.
ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆದರೆ ರಿತಿಕ್ ಅವರ ಪೋಷಕರು ಮತ್ತು ಇತರ ಕುಟುಂಬ ಸದಸ್ಯರು, ಆತನ ಸಾವಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿಯೇ ಕಾರಣ ಎಂದು ಆರೋಪಿಸಿದ್ದಾರೆ.
ರಿತಿಕ್ ಇಸಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಸನ್ಪುರ ಕಟೌಲಿ ಗ್ರಾಮದವರಾಗಿದ್ದು, ಲಖಿಂಪುರ ನಗರದ ಗಂಗೋತ್ರಿನಗರದಲ್ಲಿರುವ ಅವರ ಮತ್ತೊಂದು ನಿವಾಸದಲ್ಲಿ ಸಾವಿಗೆ ಶರಣಾಗಿದ್ದಾರೆ.
ರಿತಿಕ್ ಬುಧವಾರ ಗ್ರಾಮದಿಂದ ನಗರಕ್ಕೆ ಮರಳಿದ್ದರು ಮತ್ತು ಪರೀಕ್ಷೆ ರದ್ದತಿಯಿಂದ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದನು ಎಂದು ಅವರ ತಂದೆ ಅನೂಪ್ ಮಿಶ್ರಾ ಹೇಳಿದ್ದಾರೆ.
"ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದುಪಡಿಸಿದ ವರದಿಗಳ ನಂತರ ರಿತಿಕ್ ತೀವ್ರ ಮಾನಸಿಕ ಒತ್ತಡದಲ್ಲಿದ್ದರು" ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಿತಿಕ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕೊಠಡಿಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಲಖಿಂಪುರ ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್ಪೆಕ್ಟರ್ ರಾಜೇಶ್ ಕುಮಾರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.