ನವದೆಹಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.
ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಅವರು ಪ್ರತಿಪಾದಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ರಷ್ಯಾದ ಸಮುದ್ರ ಮಾರ್ಗದ ತೈಲ ರಫ್ತಿಗೆ ಸಂಬಂಧಿಸಿದ ಪ್ರಮುಖ ನಿರ್ಬಂಧಗಳ ಮೇಲಿನ ವಿನಾಯಿತಿಯನ್ನು ವಾರಾಂತ್ಯದಲ್ಲಿ ರದ್ದುಗೊಳಿಸಲು ಅನುಮತಿಸಿದ ನಂತರ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಕಳವಳದ ಮಧ್ಯೆ ಈ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರು, ಪಶ್ಚಿಮ ಏಷ್ಯಾ ಸಂಘರ್ಷದ ಹೊರತಾಗಿಯೂ ಕಚ್ಚಾ ತೈಲ ಆಮದುಗಳಿಗೆ ಭಾರತದ ವಿಧಾನವು "ಸ್ಥಿರ" ವಾಗಿದೆ ಎಂದು ಹೇಳಿದರು.
ನವದೆಹಲಿಯ ಖರೀದಿ ನಿರ್ಧಾರಗಳು ಕೈಗೆಟುಕುವಿಕೆ, ಲಭ್ಯತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಒಳಗೊಂಡಿರುತ್ತದೆ ಎಂದು ಅವರು ಒತ್ತಿ ಹೇಳಿದರು.
"ರಷ್ಯಾದಿಂದ ತೈಲ ರಫ್ತಿನ ಮೇಲಿನ ಅಮೆರಿಕದ ನಿರ್ಬಂಧಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶರ್ಮಾ, ನಾವು ಮೊದಲೇ ರಷ್ಯಾದಿಂದ ಖರೀದಿಸುತ್ತಿದ್ದೇವೆ ಎಂದು ನಾನು ಒತ್ತಿ ಹೇಳಲು ಬಯಸುತ್ತೇನೆ..." ಎಂದು ಅವರು ಹೇಳಿದರು.
ಇದೇ ವೇಳೆ ಯಾವುದೇ ಕಚ್ಚಾ ತೈಲದ ಕೊರತೆಯಿಲ್ಲ. ಸಾಕಷ್ಟು ಕಚ್ಚಾ ತೈಲವನ್ನು ಸಂಗ್ರಹಿಸಲಾಗಿದೆ ಎಂದು ಶರ್ಮಾ ಹೇಳಿದರು.