ನವದೆಹಲಿ: ಆಫ್ರಿಕಾ ಖಂಡದ ಕಾಂಗೋ ಮತ್ತು ಉಗಾಂಡಾದಲ್ಲಿ ಮಾರಣಾಂತಿಕ 'ಬುಂಡಿಬುಗ್ಯೊ' ಎಬೋಲಾ ವೈರಸ್ ತಳಿ ವೇಗವಾಗಿ ಹರಡುತ್ತಿರುವುದರಿಂದ ವಿಶ್ವ ಆರೋಗ್ಯ ಸಂಸ್ಥೆ (WHO) ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಮುನ್ನೆಚ್ಚರಿಕಾ ಕ್ರಮವಾಗಿ ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಹೈ-ಅಲರ್ಟ್ ಘೋಷಿಸಿದೆ. ಇದೇ ವೇಳೆ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಎಬೋಲಾ ತಡೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳುವಂತೆ ಮತ್ತು ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು (SOP) ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಸಭೆಯಲ್ಲಿ ದೇಶದಾದ್ಯಂತ ಇಬೋಲಾ ನಿಗಾ ಕ್ರಮಗಳನ್ನು ಬಲಪಡಿಸಲು ರಾಜ್ಯಗಳಿಗೆ ನಿರ್ದೇಶನ ನೀಡಲಾಗಿದ್ದು, ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಕಟ್ಟುನಿಟ್ಟಿನ ಸ್ಕ್ರೀನಿಂಗ್, ಅಗತ್ಯಬಿದ್ದರೆ ಕ್ವಾರಂಟೈನ್ ವ್ಯವಸ್ಥೆ, ರೋಗಿಗಳ ತುರ್ತು ನಿರ್ವಹಣೆ, ರೆಫರಲ್ ಪ್ರಕ್ರಿಯೆ ಮತ್ತು ಪ್ರಯೋಗಾಲಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿವರವಾದ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚನೆ ನೀಡಿದ್ದಾರೆ.
ಎಲ್ಲಾ ಸಂಬಂಧಪಟ್ಟ ಸಚಿವಾಲಯಗಳು ಮತ್ತು ಇಲಾಖೆಗಳು ಆರೋಗ್ಯ ಸಚಿವಾಲಯದೊಂದಿಗೆ ನಿರಂತರ ಸಮನ್ವಯ ಸಾಧಿಸಿ ಮುನ್ನೆಚ್ಚರಿಕೆ ವಹಿಸುತ್ತಿವೆ ಎಂದು ಸೂಚನೆ ನೀಡಿದ್ದಾರೆ.
ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ನಂತಹ ಹೈ-ರಿಸ್ಕ್ (ಹೆಚ್ಚಿನ ಅಪಾಯವಿರುವ) ದೇಶಗಳಿಂದ ಬರುವ ಅಥವಾ ಆ ದೇಶಗಳ ಮೂಲಕ ಪ್ರಯಾಣಿಸಿ ಬರುವ ಪ್ರಯಾಣಿಕರು, ಇಮಿಗ್ರೇಷನ್ ಕ್ಲಿಯರೆನ್ಸ್ಗೂ ಮುನ್ನ ವಿಮಾನ ನಿಲ್ದಾಣದ ಹೆಲ್ತ್ ಡೆಸ್ಕ್ ಅಥವಾ ಹೆಲ್ತ್ ಆಫೀಸರ್ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು.
ಆಫ್ರಿಕಾ ಪ್ರವಾಸ ಮುಗಿಸಿ ಬಂದ 21 ದಿನಗಳ ಒಳಗಾಗಿ (ವೈರಸ್ನ ಇನ್ಕ್ಯುಬೇಷನ್ ಅವಧಿ) ಜ್ವರ ಅಥವಾ ಇತರೆ ಯಾವುದೇ ಲಕ್ಷಣಗಳು ಕಂಡುಬಂದರೆ, ಪ್ರಯಾಣಿಕರು ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ತಮ್ಮ ಪ್ರಯಾಣದ ಇತಿಹಾಸವನ್ನು (Travel History) ಕಡ್ಡಾಯವಾಗಿ ಬಹಿರಂಗಪಡಿಸಬೇಕು.
ಸೋಂಕಿತ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬಂದಿದ್ದರೆ ಅಂತಹ ಪ್ರಯಾಣಿಕರು ಇಮಿಗ್ರೇಷನ್ ಪ್ರಕ್ರಿಯೆಗಿಂತ ಮುಂಚಿತವಾಗಿಯೇ ಆರೋಗ್ಯ ಅಧಿಕಾರಿಗಳಿಗೆ ಸ್ವಯಂಪ್ರೇರಿತರಾಗಿ ವರದಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ಇದೇ ವೇಳೆ ಮಾರ್ಗಸೂಚಿಯಲ್ಲಿ ಕಾಂಗೋ , ಉಗಾಂಡ ಮತ್ತು ದಕ್ಷಿಣ ಸುಡಾನ್ ದೇಶಗಳನ್ನು "ಹೈ-ರಿಸ್ಕ್" ದೇಶಗಳ ಪಟ್ಟಿಗೆ ಸೇರಿಸಲಾಗಿದೆ.
ಅಲ್ಲದೆ, ಈ ಹೈ-ರಿಸ್ಕ್ ದೇಶಗಳಿಂದ ಭಾರತಕ್ಕೆ ಬಂದಿಳಿದ 21 ದಿನಗಳ ಒಳಗಾಗಿ ಪ್ರಯಾಣಿಕರಲ್ಲಿ ಇಂತಹ ಯಾವುದೇ ಲಕ್ಷಣಗಳು ಕಂಡುಬಂದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಮತ್ತು ತಮ್ಮ ಪ್ರಯಾಣದ ಇತಿಹಾಸವನ್ನು (Travel History) ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಡ್ಡಾಯವಾಗಿ ತಿಳಿಸಬೇಕೆಂದು ಸೂಚಿಸಲಾಗಿದೆ.
ಪ್ರಯಾಣಿಕರ ಸುರಕ್ಷತೆ ಮತ್ತು ಅಂತರರಾಷ್ಟ್ರೀಯ ಆರೋಗ್ಯ ನಿಯಮಗಳ ಹಿತದೃಷ್ಟಿಯಿಂದ ವಿಮಾನ ನಿಲ್ದಾಣದಲ್ಲಿ ನಡೆಸಲಾಗುವ ಆರೋಗ್ಯ ತಪಾಸಣೆಗೆ ಎಲ್ಲರೂ ಸಹಕರಿಸಬೇಕೆಂದು ವಿನಂತಿಸಿದ್ದಾರೆ.
ಏತನ್ಮಧ್ಯೆ ಭಾರತದಲ್ಲಿ ಇದೂವರೆಗೆ ಯಾವುದೇ ಇಬೋಲಾ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದ್ದು, ಸದ್ಯ ಕೈಗೊಂಡಿರುವ ಎಲ್ಲಾ ಕ್ರಮಗಳು ಕೇವಲ ಮುನ್ನೆಚ್ಚರಿಕೆಯ ಭಾಗವಾಗಿವೆ ಎಂದು ತಿಳಿಸಿದೆ.
ಆದಾಗ್ಯೂ, ದೆಹಲಿ ಸೇರಿದಂತೆ ದೇಶದ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದು, ಇಬೋಲಾ ಕುರಿತಾದ ವಿಶೇಷ ಮಾರ್ಗಸೂಚಿಗಳನ್ನು ಪ್ರದರ್ಶಿಸಲಾಗಿದೆ.
ಜ್ವರ, ತೀವ್ರ ನಿಶ್ಯಕ್ತಿ, ತಲೆನೋವು, ಸ್ನಾಯು ನೋವು, ವಾಂತಿ, ಭೇದಿ, ಗಂಟಲು ನೋವು ಮತ್ತು ದೇಹದಲ್ಲಿ ಅಸಹಜ ರಕ್ತಸ್ರಾವದಂತಹ ಲಕ್ಷಣಗಳಿರುವ ಪ್ರಯಾಣಿಕರು ತಕ್ಷಣವೇ ವಿಮಾನ ನಿಲ್ದಾಣದ ಹೆಲ್ತ್ ಡೆಸ್ಕ್ಗೆ ವರದಿ ಮಾಡಲು ಸೂಚಿಸಲಾಗಿದೆ.
ಇಬೋಲಾ ಪೀಡಿತ ದೇಶಗಳಿಂದ ಬಂದ ಪ್ರಯಾಣಿಕರು ಭಾರತಕ್ಕೆ ತಲುಪಿದ 21 ದಿನಗಳ ಒಳಗಾಗಿ ಇಂತಹ ಯಾವುದೇ ರೋಗಲಕ್ಷಣಗಳು ಕಂಡು ಬಂದಿದ್ದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಮತ್ತು ತಮ್ಮ ಪ್ರವಾಸದ ಇತಿಹಾಸವನ್ನು ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಏರ್ಪೋರ್ಟ್ ಹೆಲ್ತ್ ಆರ್ಗನೈಸೇಶನ್ ತಿಳಿಸಿದೆ.