ಸಹರಾನ್ಪುರ: ಉತ್ತರ ಪ್ರದೇಶದ ಸಹರಾನ್ಪುರದ ಹಳ್ಳಿಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ದೇವಾಲಯದ ಅರ್ಚಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ದೇಹತ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಮಹಿಳೆಯೊಬ್ಬರು ತಮ್ಮ ಮಗಳು ದೇವಾಲಯದೊಳಗೆ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ, ಅಲ್ಲಿನ ಅರ್ಚಕರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಹೃದಯ ನಾರಾಯಣ್ ಸಿಂಗ್ ಅವರು ಹೇಳಿದ್ದಾರೆ.
ಬಾಲಕಿಯ ಕೂಗು ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಿದರು. 48 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಂತ್ರಸ್ತೆ ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯಕ್ಕೆ ಸೇರಿದವಳಾಗಿರುವುದರಿಂದ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಭೀಮ್ ಆರ್ಮಿ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು ಎಂದು ಎಸ್ಎಚ್ಒ ಹೇಳಿದ್ದಾರೆ.
ಕೆಲವು ಹಿಂದೂ ಸಂಘಟನೆಗಳ ಸದಸ್ಯರು ಸಹ ಸ್ಥಳಕ್ಕೆ ಆಗಮಿಸಿದರು. ಇದು ಸ್ಥಳದಲ್ಲಿ ಸ್ವಲ್ಪ ಸಮಯ ಉದ್ವಿಗ್ನತೆಗೆ ಕಾರಣವಾಯಿತು ಎಂದು ಅವರು ತಿಳಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಗ್ರಾಮದಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.