ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.
ಕರ್ನಾಟಕದ ಶತಾವಧಾನಿ ಆರ್. ಗಣೇಶ್ ಅವರಿಗೆ ಕಲಾ ಕ್ಷೇತ್ರಕ್ಕೆ ಸಲ್ಲಿಸಿದ ಶ್ರೇಷ್ಠ ಕೊಡುಗೆಗಳಿಗಾಗಿ ಪದ್ಮಭೂಷಣ ಪ್ರಶಸ್ತಿ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಅಂಕೇ ಗೌಡ ಎಂ. ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಡಾ. ಪ್ರಭಾಕರ ಬಸವಪ್ರಭು ಕೋರೆ, ಶಶಿ ಶೇಖರ್ ವೆಂಪತಿ, ಸಮಾಜ ಸೇವೆ ಕ್ಷೇತ್ರದಲ್ಲಿ ಎಸ್ ಜಿ ಸುಶೀಲಮ್ಮ, ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಶುಭಾ ವೆಂಕಟೇಶ್ ಅಯ್ಯಂಗಾರ್, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಸುರೇಶ ಹನಗವಾಡಿ, ವ್ಯಾಪಾರ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಟಿ ಟಿ ಜಗನ್ನಾಥನ್ (ಮರಣೋತ್ತರ) ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ರಾಷ್ಟ್ರಪತಿ ಮುರ್ಮು ಅವರು ಪದ್ಮವಿಭೂಷಣ ಪ್ರದಾನ ಮಾಡಿದರು, ನಟಿ ಹೇಮಾ ಮಾಲಿನಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಪಿಟೀಲು ವಾದಕ ಎನ್ ರಾಜಮ್ ಅವರಿಗೆ ಪದ್ಮವಿಭೂಷಣ, ಮಾಜಿ ಮಹಾರಾಷ್ಟ್ರ ಗವರ್ನರ್ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಪದ್ಮಭೂಷಣ ಮತ್ತು ಬ್ಯಾಂಕರ್ ಉದಯ್ ಕೋಟಕ್ ಅವರಿಗೆ ಪದ್ಮಭೂಷಣವನ್ನು ರಾಷ್ಟ್ರಪತಿಗಳು ಪ್ರದಾನ ಮಾಡಿದರು. ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.