ನವದೆಹಲಿ: ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ಹೊರಡಿಸಿದೆ.
ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ಬಳಿಕ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ದೇಶದ ಎಲ್ಲಾ ಹೈಕೋರ್ಟ್ಗಳಿಗೆ ಸೂಚಿಸಿರುವ ಸುಪ್ರೀಂ ಕೋರ್ಟ್, ಜಾಮೀನು ಅರ್ಜಿಗಳಂತಹ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಲೇವಾರಿ ಮಾಡುವಂತೆ ಒತ್ತಿ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.
ತೀರ್ಪು ಪ್ರಕಟಿಸಲು ವಿಳಂಬವಾಗುವುದರಿಂದ ಅರ್ಜಿದಾರರಿಗೆ ತುಂಬಲಾರದ ನಷ್ಟ ಉಂಟಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ತ್ವರಿತ ನಿರ್ಧಾರ ಅತ್ಯಗತ್ಯ ಎಂದು ಕೋರ್ಟ್ ಒತ್ತಿ ಹೇಳಿದೆ. ವಿಶೇಷವಾಗಿ ಜಾಮೀನು ಅರ್ಜಿಗಳನ್ನು ಸಾಧ್ಯವಾದರೆ ಅದೇ ದಿನವೇ ವಿಲೇವಾರಿ ಮಾಡಬೇಕು ಎಂದು ಸೂಚಿಸಿದೆ.
ಒಂದು ವೇಳೆ ಆದೇಶವನ್ನು ಕಾಯ್ದಿರಿಸಿದರೆ, ಮುಂದಿನ ದಿನದೊಳಗೆ ತೀರ್ಪು ಪ್ರಕಟಿಸಿ ಅಪ್ಲೋಡ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಜಾಮೀನು ಮಂಜೂರು ಅಥವಾ ಶಿಕ್ಷೆ ಅಮಾನತು ಆದೇಶಗಳನ್ನು ಕೂಡ ತಕ್ಷಣವೇ ಜೈಲು ಅಧಿಕಾರಿಗಳಿಗೆ ತಲುಪಿಸಬೇಕು. ಅದರಂತೆ ಆರೋಪಿಯನ್ನು ಅಥವಾ ಶಿಕ್ಷಿತನನ್ನು ಸಾಧ್ಯವಾದರೆ ಅದೇ ದಿನ, ಇಲ್ಲವೇ ಮುಂದಿನ ದಿನ ಬಿಡುಗಡೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.