ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ನಡೆದ ದಾಳಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ದಾಳಿಯಲ್ಲಿ ಅಭಿಷೇಕ್ ಅವರ ಎದೆ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಕೊನೆಯ ಕ್ಷಣದಲ್ಲಿ ಹೆಲ್ಮೆಟ್ ಧರಿಸದಿದ್ದರೆ ಪರಿಣಾಮ ಘೋರವಾಗುವ ಸಾಧ್ಯತೆಗಳಿತ್ತು ಎಂದು ಹೇಳಿದ್ದಾರೆ.
ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಒಳಗಾದ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳಿದ್ದ ವೇಳೆ, ಕೆಲ ಸ್ಥಳೀಯರು ಅಭಿಷೇಕ್ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ ನಡೆಸಿ ಮೊಟ್ಟೆ ಎಸೆದು, ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಅವರನ್ನು ಸುತ್ತುವರಿದ ಗುಂಪು ತಳ್ಳಾಟ ನಡೆಸಿದ ಆರೋಪವೂ ಕೇಳಿಬಂದಿದೆ.
ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿಯವರು, ಘಟನೆಯ ಬಳಿಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಕುತ್ತಿಗೆ, ಬೆನ್ನು ಹಾಗೂ ಸೊಂಟ ಭಾಗದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ಹಲವು ಪರೀಕ್ಷೆಗಳನ್ನು ನಡೆಸಲು ಸೂಚಿಸಿದ್ದರು ಎಂದು ತಿಳಿಸಿದ್ದಾರೆ.
ವೈದ್ಯರ ಪ್ರಾಥಮಿಕ ಪರೀಕ್ಷೆಯಲ್ಲಿ ಮುಖ, ಎದೆ, ಕುತ್ತಿಗೆ ಮತ್ತು ಬೆನ್ನಿನ ಭಾಗದಲ್ಲಿ ಹಲವು ಗಾಯಗಳಿರುವುದು ದೃಢಪಟ್ಟಿದೆ. ಎದೆ ಮತ್ತು ಪಕ್ಕೆಯಲ್ಲಿ ತೀವ್ರ ಹೊಡೆತದ ಗುರುತುಗಳಿದ್ದು, ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ನೀಡದಂತೆ ಮೇಲಿಂದ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ ಅವರು, ಗಾಯಗೊಂಡ ರೋಗಿಯ ಚಿಕಿತ್ಸೆ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಕಿಡಿಕಾರಿದ್ದಾರೆ.
ಬಿಜೆಪಿ ವಿರುದ್ಧ ಅಭಿಷೇಕ್ ಆರೋಪ
ಘಟನೆಯ ಕುರಿತು ಪ್ರತಿಕ್ರಿಯಿಸಿದ ಅಭಿಷೇಕ್ ಬ್ಯಾನರ್ಜಿ, “ಇದು ಸಂಪೂರ್ಣ ಬಿಜೆಪಿ ಪ್ರಾಯೋಜಿತ ದಾಳಿ. ಇದೇ ಅವರ ಪ್ರಜಾಪ್ರಭುತ್ವದ ಮಾದರಿ. ಚುನಾವಣೆ ಮುಗಿದು ಒಂದು ತಿಂಗಳೂ ಆಗಿಲ್ಲ, ಆದರೆ, ಪೊಲೀಸರು ಎಲ್ಲಿಯೂ ಕಾಣಿಸುತ್ತಿಲ್ಲ” ಎಂದು ಆರೋಪಿಸಿದ್ದಾರೆ. ಈ ನಡುವೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ತಿರುಗೇಟು
ಏತನ್ಮಧ್ಯೆ ಟಿಎಂಸಿ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕಿ ಕೀಯಾ ಘೋಷ್ ಅವರು, “ಕಳೆದ 15 ವರ್ಷಗಳಿಂದ ಟಿಎಂಸಿ ಆಡಳಿತದಲ್ಲಿ ಜನರು ಅನೇಕ ದೌರ್ಜನ್ಯಗಳನ್ನು ಅನುಭವಿಸಿದ್ದಾರೆ. ಈಗ ಅದಕ್ಕೆ ಪ್ರತಿಫಲ ಸಿಗುತ್ತಿದೆ. ಕರ್ಮ ಎಂದರೇನು ಎಂಬುದು ಅವರಿಗೆ ಈಗ ಅರ್ಥವಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.