ಛತ್ರಪತಿ ಸಂಭಾಜಿನಗರ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಏಷ್ಯನ್ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು.
ಘಟನೆಯ ವೇಳೆ ಐಸಿಯುನಲ್ಲಿದ್ದ 9 ಶಿಶುಗಳು ಸೇರಿದಂತೆ 58 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆ ಸಿಬ್ಬಂದಿ ಸಮಯಪ್ರಜ್ಞೆಯಿಂದ ಎಲ್ಲ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದರಿಂದ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ಆಸ್ಪತ್ರೆ ಅಧಿಕಾರಿಗಳ ಪ್ರಕಾರ, ಇಂದು ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಆ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ 9 ಶಿಶುಗಳು ಸೇರಿದಂತೆ ಒಟ್ಟು 58 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಂಡ ಕೂಡಲೇ ಐಸಿಯುನಲ್ಲಿದ್ದ ಶಿಶುಗಳು ಸೇರಿದಂತೆ ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಹೇಳಿದ್ದಾರೆ.
ಶಿಶುಗಳನ್ನು ಘಾಟಿ ಆಸ್ಪತ್ರೆ ಹಾಗೂ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಉಳಿದ ರೋಗಿಗಳನ್ನು ಕೂಡ ತುರ್ತಾಗಿ ಇತರೆ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಯಿತು.
ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕೆಲವೇ ಸಮಯದಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು ಎಂದು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆಸ್ಪತ್ರೆಯ ಕೊಠಡಿಯೊಂದರಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಘಟನೆಯ ಬಳಿಕ ಸುಮಾರು 15ರಿಂದ 20 ಆಂಬ್ಯುಲೆನ್ಸ್ಗಳು ಆಸ್ಪತ್ರೆಗೆ ಆಗಮಿಸಿ ರೋಗಿಗಳನ್ನು ಇತರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ನೆರವಾದವು ಎಂದು ತಿಳಿದುಬಂದಿದೆ.
ತುರ್ತು ಚಿಕಿತ್ಸೆ ಅಗತ್ಯವಿದ್ದ ರೋಗಿಗಳನ್ನು ಕೂಡಲೇ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಯಿತು. ಆಸ್ಪತ್ರೆಯ ಭದ್ರತಾ ವ್ಯವಸ್ಥೆಯನ್ನು ತಕ್ಷಣ ಎಚ್ಚರಿಸಲಾಗಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಾವುದೇ ಗಾಯ ಅಥವಾ ಸಾವು ಸಂಭವಿಸದಿದ್ದರೂ, ಈ ಘಟನೆ ಆಸ್ಪತ್ರೆಗಳಲ್ಲಿನ ಅಗ್ನಿ ಸುರಕ್ಷತಾ ವ್ಯವಸ್ಥೆ ಹಾಗೂ ತುರ್ತು ಸ್ಥಳಾಂತರ ಕ್ರಮಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಂಕಿಗೆ ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಇದಕ್ಕೂ ಅಮರಾವತಿ ಜಿಲ್ಲಾ ಮಹಿಳಾ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇದರ ನೆನಪು ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದೆ. ಅಮರಾವತಿ ಆಸ್ಪತ್ರೆಯಲ್ಲಿ ಸಂಭವಿಸಿದ್ದ ಘಟನೆಯಲ್ಲಿ ಮೂವರು ನವಜಾತ ಶಿಶುಗಳು ಮೃತಪಟ್ಟು, ಹಲವು ಶಿಶುಗಳು ಗಂಭೀರವಾಗಿ ಸುಟ್ಟ ಗಾಯಗಳಿಗೆ ಒಳಗಾಗಿದ್ದವು. ಮತ್ತೂ 36 ಶಿಶುಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ ನಗರದ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.
ಕೆಲ ದಿನಗಳ ಹಿಂದೆ ಸರ್ಕಾರ ನೇಮಿಸಿದ್ದ ತನಿಖಾ ಸಮಿತಿ ಅಮರಾವತಿ ಜಿಲ್ಲಾ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ (NICU) ಭೇಟಿ ನೀಡಿ, ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು, ನರ್ಸ್ಗಳು ಹಾಗೂ ಇತರ ಸಿಬ್ಬಂದಿಯೊಂದಿಗೆ ಮಾಹಿತಿ ಸಂಗ್ರಹಿಸಿತ್ತು. ಈ ಕುರಿತು ತನಿಖಾ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ.