ಬೆಂಗಳೂರು: ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (TMC) ನಾಯಕ ಹಾಗೂ ಪಶ್ಚಿಮ ಬಂಗಾಳದ ಪಾಣಿಹಟಿ ಪುರಸಭೆಯ ಮಾಜಿ ಅಧ್ಯಕ್ಷ ಸೋಮನಾಥ್ ಡೇ ಅವರನ್ನು ಪಶ್ಚಿಮ ಬಂಗಾಳದ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಬೆಂಗಳೂರಲ್ಲಿ ಸೆರೆ
2024 ರಲ್ಲಿ ನಡೆದ ಆರ್ಜಿ ಕರ್ ವೈದ್ಯಕೀಯ ಕಾಲೇಜು ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ, ಮೃತದೇಹದ ಎರಡನೇ ಮರಣೋತ್ತರ ಪರೀಕ್ಷೆಗೆ ಅವಕಾಶ ಸಿಗಬಾರದು ಎಂಬ ಉದ್ದೇಶದಿಂದ ತರಾತುರಿಯಲ್ಲಿ ಸಾಕ್ಷ್ಯ ನಾಶಪಡಿಸಲು ಹಾಗೂ ನಿಯಮಗಳನ್ನು ಮೀರಿ ತರಾತುರಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಿದ ಸಂಚಿನಲ್ಲಿ ಸೋಮನಾಥ್ ಡೇ ಭಾಗಿಯಾಗಿದ್ದರು ಎಂಬ ಗಂಭೀರ ಆರೋಪವಿದೆ. ಮೃತರ ಕುಟುಂಬದವರ ದೂರಿನ ಮೇರೆಗೆ ಇವರ ವಿರುದ್ಧ ಹೊಸ ಎಫ್ಐಆರ್ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಇವರು ಮೊದಲು ಹೈದರಾಬಾದ್ಗೆ ಓಡಿಹೋಗಿದ್ದರು. ಪೊಲೀಸರು ಬೆನ್ನಟ್ಟುತ್ತಿದ್ದಂತೆ ಅಲ್ಲಿಂದ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಪಶ್ಚಿಮ ಬಂಗಾಳದ ಖಾರ್ಡಾ ಪೊಲೀಸ್ ತಂಡ ಬೆಂಗಳೂರಿಗೆ ಆಗಮಿಸಿ ಇವರನ್ನು ಬುಧವಾರ ತಡರಾತ್ರಿ ವಶಕ್ಕೆ ಪಡೆದಿದೆ.
ಮೂರನೇ ಬಂಧನ
ಮುಂದುವರೆದು, ಈ ಅಂತಿಮ ಸಂಸ್ಕಾರದ ವಿವಾದಕ್ಕೆ ಸಂಬಂಧಿಸಿದಂತೆ ಇದು ಮೂರನೇ ಬಂಧನವಾಗಿದೆ. ಇದಕ್ಕೂ ಮುನ್ನ ಟಿಎಂಸಿ ಮಾಜಿ ಶಾಸಕ ನಿರ್ಮಲ್ ಘೋಷ್ ಮತ್ತು ಸ್ಥಳೀಯ ಕೌನ್ಸಿಲರ್ ಸಂಜೀವ್ ಮುಖರ್ಜಿ ಎಂಬುವವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು.