ನವದೆಹಲಿ: ದೆಹಲಿಯ ನೈಋತ್ಯ ಭಾಗದ ಸತ್ಯ ನಿಕೇತನ ಪ್ರದೇಶದಲ್ಲಿ ಬಾಲಕರ ಪಿಜಿ ವಸತಿ ಕಟ್ಟಡ ಕುಸಿದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ದೆಹಲಿಯ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೇರಿದ್ದು, ಈವರೆಗೂ 9 ಮಂದಿಯನ್ನು ರಕ್ಷಣೆ ಮಾಡಲಾಗಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ದೆಹಲಿ ಸಿಎಂ ರೇಖಾ ಗುಪ್ತಾ ಕೂಡ ಘಟನಾ ಸ್ಥಳಕ್ಕೇ ಭೇಟಿ ನೀಡಿ ದುರಂತದ ಕುರಿತು ತನಿಖೆಗೆ ಸಮಿತಿ ರಚನೆ ಮಾಡಿದ್ದಾರೆ.
ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪ್ರತಿ ವಿದ್ಯಾರ್ಥಿಯ ಜೀವವೂ ಅಮೂಲ್ಯವಾಗಿದ್ದು, ಎಲ್ಲ ಸಂದರ್ಭಗಳಲ್ಲೂ ಅವರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಹೇಳಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಕೂಡ ಆಗಿರುವ ರಾಹುಲ್ ಗಾಂಧಿ, ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸತ್ಯ ನಿಕೇತನದಲ್ಲಿ ಕಟ್ಟಡ ಕುಸಿದಿರುವ ಸುದ್ದಿ ಅತ್ಯಂತ ದುಃಖಕರ ಮತ್ತು ಆತಂಕಕಾರಿ ಎಂದು ಹೇಳಿದ್ದಾರೆ.
'ದೆಹಲಿ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಅವಶೇಷಗಳಡಿ ಸಿಲುಕಿರುವ ವರದಿಗಳಿವೆ. ಒಬ್ಬೊಬ್ಬ ವಿದ್ಯಾರ್ಥಿಯನ್ನೂ ತಲುಪಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು. NDRF, ದೆಹಲಿ ಅಗ್ನಿಶಾಮಕ ದಳ ಹಾಗೂ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸಬೇಕು. ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ತುರ್ತು ಚಿಕಿತ್ಸೆಯನ್ನು ತಕ್ಷಣ ಒದಗಿಸಬೇಕು' ಎಂದು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ಯಾರೊಬ್ಬರ ಜೀವ ಉಳಿಸುವ ಪ್ರಯತ್ನದಲ್ಲೂ ಯಾವುದೇ ಲೋಪವಾಗಬಾರದು. ಸ್ಥಳದಲ್ಲಿ ಕಾಂಗ್ರೆಸ್ ಮತ್ತು NSUI ಕಾರ್ಯಕರ್ತರು ಉಪಸ್ಥಿತರಿದ್ದು, ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಲು ಸಿದ್ಧರಾಗಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಹಳೆಯ ಕಟ್ಟಡ ಕುಸಿತ
ಭಾನುವಾರ ಮಧ್ಯಾಹ್ನ ಕುಸಿದ ಐದು ಅಂತಸ್ತಿನ ಕಟ್ಟಡದ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ಇದ್ದು, ಓರ್ವ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ ಕ್ಯಾಂಪಸ್ನ ಸಮೀಪದಲ್ಲೇ ಸತ್ಯ ನಿಕೇತನ ಪ್ರದೇಶವಿದ್ದು, ವಿದ್ಯಾರ್ಥಿಗಳ ಹಾಸ್ಟೆಲ್ಗಳು ಹಾಗೂ ಹೋಟೆಲ್ಗಳಿಂದ ಕೂಡಿದ ಕಿರಿದಾದ ರಸ್ತೆಗಳನ್ನು ಈ ಪ್ರದೇಶ ಹೊಂದಿದೆ.