ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಬೇಕಿದ್ದ ಕಾರ್ಯಕ್ರಮದ ಸ್ಥಳದಲ್ಲಿ ಭಾರೀ ಭದ್ರತಾ ಲೋಪವಾಗಿದ್ದು, ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಇಬ್ಬರನ್ನ ಮುಂಬೈ ಪೊಲೀಸರು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಪ್ರಧಾನಿ ಮೋದಿ ಅವರ ಕಾರ್ಯಕ್ರಮ ನಡೆಯಬೇಕಿದ್ದ ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ನೀತಾ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಪುಣೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಬಂಧಿತರಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ತಾನು ಪ್ರಧಾನಿ ಕಚೇರಿಯ(ಪಿಎಂಒ) ಅಧಿಕಾರಿ ಎಂದು ಹೇಳಿಕೊಂಡಿದ್ದಾರೆ. ಆದರೆ ಪರಿಶೀಲನೆ ವೇಳೆ ಆತ ಹೊಂದಿದ್ದ ಗುರುತಿನ ಚೀಟಿ ನಕಲಿ ಎಂಬುದು ಬೆಳಕಿಗೆ ಬಂದಿದೆ.
ಇನ್ನು ಬಂಧಿತ ಮತ್ತೊಬ್ಬ ವ್ಯಕ್ತಿಯ ಬಳಿ ಬಂದೂಕು ಪತ್ತೆಯಾಗಿದ್ದು, ಪ್ರಧಾನಿ ಮೋದಿ ಭಾಗವಹಿಸುವುದಕ್ಕೆ ಮುನ್ನವೇ ಈ ಬೆಳವಣಿಗೆ ಭದ್ರತಾ ಆತಂಕ ಹೆಚ್ಚಿಸಿದೆ.
ಮುಂಬೈ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ತನಿಖೆ ಆರಂಭಿಸಿದ್ದಾರೆ. ತನಿಖೆಯನ್ನು ಈಗ ಮುಂಬೈ ಅಪರಾಧ ವಿಭಾಗ ಕೈಗೆತ್ತಿಕೊಂಡಿದೆ.
ಮುಂಬೈ ಪೊಲೀಸರ ಮಾಹಿತಿ ಪ್ರಕಾರ, ಕಾರ್ಯಕ್ರಮದ ಸ್ಥಳದಲ್ಲಿ ಓರ್ವ ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಆತನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನೊಂದಿಗೆ ಬಂದಿದ್ದ ಅಂಗರಕ್ಷಕನನ್ನೂ ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಶಕ್ಕೆ ಪಡೆದ 24 ವರ್ಷದ ರೋಹನ್ ಪಾರೇಖ್ ಎಂಬಾತ ತಾನು ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಆದರೆ ಆತನ ಐಡಿ ಕಾರ್ಡ್ ಪರಿಶೀಲಿಸಿದಾಗ, ಗುರುತಿನ ಚೀಟಿ ನಕಲಿ ಎಂಬುದು ಪತ್ತೆಯಾಗಿದೆ. ಇದೇ ವೇಳೆ ರೋಹನ್ ಪಾರೇಖ್ನೊಂದಿಗೆ ಇದ್ದ ಆತನ ಅಂಗರಕ್ಷಕನ ಬಳಿ ಬಂದೂಕು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಕೆಲವೇ ಗಂಟೆಗಳ ಮುನ್ನ ನಡೆದಿರುವುದರಿಂದ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5:45ಕ್ಕೆ ಮುಂಬೈನಲ್ಲಿ ಗ್ಲೋಬಲ್ ಫಿನ್ಟೆಕ್ ಫೆಸ್ಟ್(GFF) 2026ರ ಏಳನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.