ನವದೆಹಲಿ: 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ನವದೆಹಲಿಗೆ ಆಗಮಿಸಿದ್ದಾರೆ.
ಗುರುವಾರ ತಡರಾತ್ರಿ ದೆಹಲಿಯ ಪಾಲಂ ವಾಯುಪಡೆ ನಿಲ್ದಾಣಕ್ಕೆ ಬಂದಿಳಿದ ಪುಟಿನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಕೆ.ವಿ. ಸಿಂಗ್ ಅವರು ಪ್ರೀತಿಯಿಂದ ಬರಮಾಡಿಕೊಂಡರು.
ಈ ಕುರಿತು ಎಸ್ಕ್ ನಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, “18ನೇ ಬ್ರಿಕ್ಸ್ ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭಾರತಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇವೆ. ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಕೆ.ವಿ. ಸಿಂಗ್ ಅವರು ಅವರನ್ನು ಬರಮಾಡಿಕೊಂಡರು.
ಭಾರತ ಮತ್ತು ರಷ್ಯಾ ಬಹುಮುಖ ಹಾಗೂ ದೀರ್ಘಕಾಲದ ಸಂಬಂಧವನ್ನು ಹೊಂದಿದ್ದು, ಈ ಸಂಬಂಧ ವಿಶೇಷ ಮತ್ತು ವಿಶೇಷಾಧಿಕಾರ ಹೊಂದಿದ ಕಾರ್ಯತಂತ್ರದ ಪಾಲುದಾರಿಕೆಯ ಮೇಲೆ ಆಧಾರಿತವಾಗಿದೆ” ಎಂದು ಹೇಳಿದ್ದಾರೆ.
ಭಾರತದ ಆತಿಥ್ಯದಲ್ಲಿ ಸೆಪ್ಟೆಂಬರ್ 12 ಮತ್ತು 13 ರಂದು ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಈ ಬಾರಿಯ ಬ್ರಿಕ್ಸ್ ಶೃಂಗಸಭೆ ನಡೆಯುತ್ತಿದ್ದು, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಮೂರು ದಿನಗಳ ಭಾರತದಲ್ಲಿ ತಂಗಲಿದ್ದು, ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಹಾಗೂ ಇಂಧನ ಸಹಕಾರ ವಿಸ್ತರಣೆಗೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.
ಉಕ್ರೇನ್ ಯುದ್ಧ ಆರಂಭವಾದ 2022ರ ಫೆಬ್ರವರಿ ಬಳಿಕ ರಷ್ಯಾದ ಹೊರಗೆ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪುಟಿನ್ ಅವರು ಇದೇ ಮೊದಲ ಬಾರಿಗೆ ಖುದ್ದಾಗಿ ಭಾಗವಹಿಸುತ್ತಿದ್ದಾರೆ.
ಭಾರತ ಆತಿಥ್ಯ ವಹಿಸಿರುವ ಎರಡು ದಿನಗಳ ಬ್ರಿಕ್ಸ್ ಶೃಂಗಸಭೆ ಶನಿವಾರದಿಂದ ನವದೆಹಲಿಯಲ್ಲಿ ಆರಂಭವಾಗಲಿದೆ. ಆಹಾರ, ಇಂಧನ, ಆರೋಗ್ಯ, ವಿಪತ್ತು ನಿರ್ವಹಣೆ ಹಾಗೂ ಪ್ರಮುಖ ಪೂರೈಕೆ ಸರಪಳಿಗಳಲ್ಲಿ ಒಟ್ಟಾರೆ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವ ಕುರಿತು ಶೃಂಗಸಭೆಯಲ್ಲಿ ಗಮನ ಹರಿಸುವ ನಿರೀಕ್ಷೆಯಿದೆ. ಜಾಗತಿಕ ಭೌಗೋಳಿಕ-ರಾಜಕೀಯ ಪರಿಸ್ಥಿತಿ ವಿಭಜನೆಯಾಗುತ್ತಿರುವ ಸಂದರ್ಭದಲ್ಲಿ ಪರಿಣಾಮಕಾರಿ ವೇದಿಕೆಯಾಗಿ ಬ್ರಿಕ್ಸ್ ಅನ್ನು ರೂಪಿಸುವ ನಿಟ್ಟಿನಲ್ಲಿ ಭಾರತ ತನ್ನ ಆದ್ಯತೆಯನ್ನು ಮುಂದಿಡುತ್ತಿದೆ.
ರಷ್ಯಾ-ಉಕ್ರೇನ್ ಯುದ್ಧ, ಮಧ್ಯಪ್ರಾಚ್ಯ ಬಿಕ್ಕಟ್ಟು, ಅದರಲ್ಲೂ ವಿಶೇಷವಾಗಿ ಹೋರ್ಮುಜ್ ಜಲಸಂಧಿಯ ನಿರ್ಬಂಧ, ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ವ್ಯಾಪಾರ ಮತ್ತು ಸುಂಕ ನೀತಿಗಳಿಂದ ಜಾಗತಿಕ ಆರ್ಥಿಕತೆ ಪ್ರತಿಕೂಲ ಪರಿಣಾಮಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಈ ಶೃಂಗಸಭೆ ನಡೆಯುತ್ತಿದೆ.
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್, ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ, ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ, ಅಬುಧಾಬಿ ಯುವರಾಜ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್, ಇಥಿಯೋಪಿಯಾ ಪ್ರಧಾನಿ ಅಬಿ ಅಹ್ಮದ್ ಅಲಿ ಹಾಗೂ ವಿಯೆಟ್ನಾಂ ಪ್ರಧಾನಿ ಲೆ ಮಿನ್ ಹುಂಗ್ ಸೇರಿದಂತೆ ಹಲವು ಪ್ರಮುಖ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.
ಶೃಂಗಸಭೆಯಲ್ಲಿ ಪಾಲ್ಗೊಂಡ ಬಳಿಕ ಇಂದು ಮಧ್ಯಾಹ್ನ ಪುಟಿನ್ ಹಾಗೂ ಪ್ರಧಾನಿ ಮೋದಿ ಅವರು ವಿಸ್ತೃತ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ರಕ್ಷಣಾ ಕ್ಷೇತ್ರ, ಇಂಧನ, ತಂತ್ರಜ್ಞಾನ, ಔಷಧ, ಜನರ ನಡುವಿನ ಸಂಪರ್ಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಉಭಯ ನಾಯಕರು ಚರ್ಚಿಸುವ ನಿರೀಕ್ಷೆಯಿದೆ.