ನವದೆಹಲಿ: ಸತ್ಯ ನಿಕೇತನ ಪ್ರದೇಶದ ವಿದ್ಯಾರ್ಥಿಗಳ ಪಿಜಿ ಕಟ್ಟಡ ಕುಸಿತದ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಕಟ್ಟಡ ಕುಸಿತದ ಆತಂಕ ಎದುರಾಗಿದ್ದು, ನಾಲ್ಕು ಅಂತಸ್ತಿನ ಕಟ್ಟಡ ವಾಲಿದ್ದು ನೆಲಸಮಗೊಳಿಸಲು ದೆಹಲಿ ಕಾರ್ಪೋರೇಷನ್ ಸೂಚನೆ ನೀಡಿದೆ.
ಹೌದು.. ದೆಹಲಿಯ ಗಾಂಧಿನಗರ ಪ್ರದೇಶದಲ್ಲಿ ನಾಲ್ಕಂತಸ್ತಿನ ಕಟ್ಟಡವೊಂದು ಭಾನುವಾರ ಏಕಾಏಕಿ ವಾಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡವನ್ನು ಖಾಲಿ ಮಾಡಿಸಲಾಗಿದೆ.
ಕಟ್ಟಡದ ಮಾಲೀಕರು ಸ್ವಯಂಪ್ರೇರಿತವಾಗಿ ಕಟ್ಟಡವನ್ನು ನೆಲಸಮಗೊಳಿಸುವಂತೆ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೂಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರದಂದೇ ಕಟ್ಟಡವನ್ನು ನೆಲಸಮಗೊಳಿಸುವಂತೆ ಮಾಲೀಕರಿಗೆ ಸೂಚಿಸಲಾಗಿದ್ದು, ಒಂದು ವೇಳೆ ಮಾಲೀಕರು ಕ್ರಮ ಕೈಗೊಳ್ಳದಿದ್ದರೆ, ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಎಂಸಿಡಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಪಾಲಿಕೆ ಅಧಿಕಾರಿ ಹೇಳಿದ್ದಾರೆ.
ವಾಲಿದ ಕಟ್ಟಡ, ಸ್ಥಳೀಯರಲ್ಲಿ ಆತಂಕ
ಶಹದಾರಾ ಪ್ರದೇಶದಲ್ಲಿರುವ ಈ ಕಟ್ಟಡ ಏಕಾಏಕಿ ವಾಲಿದ್ದರಿಂದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಉಂಟಾಯಿತು. ಕೂಡಲೇ ಕಟ್ಟಡವನ್ನು ಖಾಲಿ ಮಾಡಿಸಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಸ್ಥಳವನ್ನು ಸುತ್ತುವರಿದು, ಜನರು ಕಟ್ಟಡದ ಸಮೀಪ ತೆರಳದಂತೆ ನಿರ್ಬಂಧಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಂಸಿಡಿ ಅಧಿಕಾರಿಗಳ ತಂಡವೂ ಸ್ಥಳಕ್ಕೆ ಧಾವಿಸಿ ಕಟ್ಟಡದ ಸ್ಥಿತಿಗತಿಗಳನ್ನು ಪರಿಶೀಲಿಸಿದೆ. ಸುತ್ತಮುತ್ತ ವಾಸಿಸುವ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ 2ನೇ ಪ್ರಕರಣ
ಕಳೆದ ವಾರ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಬಾಲಕರ ಹಾಸ್ಟೆಲ್ ಹೊಂದಿದ್ದ ಐದಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿತ್ತು. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ದುರಂತದ ಬೆನ್ನಲ್ಲೇ ಮತ್ತೊಂದು ಕಟ್ಟಡ ವಾಲಿರುವುದು ದೆಹಲಿಯಲ್ಲಿ ಆತಂಕಕ್ಕೆ ಕಾರಣವಾಗಿದೆ.