ಬೆಂಗಳೂರು: ಜನಪರ ಕೆಲಸಗಳ ನಿರ್ಲಕ್ಷ್ಯ, ಕಬ್ಬು ಬೆಳೆಗಾರರಿಗೆ ಅನ್ಯಾಯ ಹಾಗೂ ಅರ್ಕಾವತಿ ಭೂ ಹಗರಣಗಳನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಡಲಿದೆ. ಇದಕ್ಕೆ ಜೆಡಿಎಸ್ ಕೂಡ ಬೆಂಬಲಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ಹೇಳಿದರು. ನಗರದ ಮಲ್ಲೇಶ್ವರದಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ವರ್ಷದ ಮೊದಲ ಅಧಿವೇಶನ ಸರ್ಕಾರದ ಪಾಲಿಗೆ ಅಷ್ಟು ಸುಲಭವಿಲ್ಲ.ಸರ್ಕಾರದ ನಿರ್ಲಕ್ಷ್ಯದ ನಡೆ ರಾಜ್ಯದ ಜನತೆಯಲ್ಲಿ ಬೇಸರ ಮೂಡಿಸಿದೆ. ಆಡಳಿತಾರೂಢ ಪಕ್ಷದ ಶಾಸಕರೇ ಮಂತ್ರಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಆಂತರಿಕ ಜಗಳ ಬೀದಿಗೆ ಬಿದ್ದಿದೆ. ಅರ್ಕಾವತಿ ಭೂಹಗರಣ ಸರ್ಕಾರಕ್ಕೆ ಉರುಳಾಗಿದ್ದು, 2015ನೇ ಸಾಲಿನ ಮೊದಲ ಅಧಿವೇಶನ ಕಾಂಗ್ರೆಸ್ ಸರ್ಕಾರಕ್ಕೆ ಆಪತ್ತು ತರುವುದು ಖಚಿತವಾಗಿದೆ ಎಂದು ಭವಿಷ್ಯ ನುಡಿದರು. ಅರ್ಕಾವತಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ, ಜನ ಜಾಗೃತಿ ಮೂಡಿಸಲು ಹಗರಣದ ಸಮಗ್ರ ವಿವರದ ಕಿರು ಹೊತ್ತಗೆ ತಂದಿದೆ. ಬೆಳಗಾವಿ ಅಧಿವೇಶನದಲ್ಲೂ ಈ ವಿಷಯ ಪ್ರಸ್ತಾಪಿಸಿ ಹೋರಾಡಿದೆ. ಸದ್ಯಕ್ಕೀಗ ಸಮಾಜ ಸೇವಾ ಹೋರಾಟಗಾರರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಹೀಗೆ ಒಂದೆಡೆ ಕಾನೂನು ಹೋರಾಟಕ್ಕೆ ವೇದಿಕೆ ಸಜ್ಜುಗೊಳ್ಳುತ್ತಿರುವ ಬೆನ್ನಲೇ, ತಮ್ಮ ಪಕ್ಷ ಅರ್ಕಾವತಿ ಭೂ ಹಗರಣವನ್ನು ಸದನದಲ್ಲಿ ಪ್ರಸ್ತಾಪಿಸುವ ಮೂಲಕ ಸರ್ಕಾರದ ವಿರುದ್ಧ ಸಮರ ಸಾರಲಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.