ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುವಲ್ಲಿ ರಾಜ್ಯ ಬಿಜೆಪಿ ಮುಖಂಡರು ಸೋತಿದ್ದಾರೆ ಎಂಬ ಸಂದೇಶ ಕೇಂದ್ರ ನಾಯಕರಿಗೆ ರವಾನೆಯಾಗಿದೆ.
ನಿರಂತರ ಹೋರಾಟ ನಡೆಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಶನಿವಾರ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯದ ಮುಖಂಡರಿಗೆ ಬಿಸಿ ಮುಟ್ಟಿಸುವ ಸಾಧ್ಯತೆ ಇದೆ. ಸರ್ಕಾರದ ವಿರುದ್ಧದ ಹೋರಾಟವನ್ನು ಇನ್ನಷ್ಟು ಪ್ರಖರಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ. ಆದರೆ ಬಿಜೆಪಿಯಿಂದ ಸರ್ಕಾರಕ್ಕೆ ಯಾವುದೇ ಅಪಾಯವಾಗದ ನಿಟ್ಟಿನಲ್ಲಿ ಹೋರಾಟಗಳನ್ನು ರೂಪಿಸುವ ಸಾಧ್ಯತೆ ಇದೆ.
ಇದರ ಜತೆಗೆ ಕೇಂದ್ರ ಸರ್ಕಾರದ ಯೋಜನೆಗಳಾದ ಸ್ವಚ್ಛಭಾರತ, ಜನಧನ, ಮೇಕ್ ಇನ್ ಇಂಡಿಯಾ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಹಾಗೂ ವಿಶೇಷವಾಗಿ ಸ್ವಚ್ಛ ಭಾರತ ಯೋಜನೆ ಕುರಿತಂತೆ ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆ ಬಗ್ಗೆ ಅಮಿತ್ ಶಾ ಪಾಠ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳೊಂದಿಗೆ ವಿಶೇಷ ಸಭೆ ನಡೆಸುತ್ತಿದ್ದಾರೆ.
ರಾಜಭವನದಲ್ಲಿ ಕೆಪಿಎಸ್ಸಿ ಗಲಾಟೆ
ಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿ ರಾಜಭವನಕ್ಕೆ ಬಿಜೆಪಿ ಮುಖಂಡರು ಶುಕ್ರವಾರ ಪರೇಡ್ ನಡೆಸಿದ್ದಾರೆ. ರಾಜಕೀಯ ಹಿನ್ನಲೆ ಹಾಗೂ ನಾನಾ ಆರೋಪಗಳನ್ನು ಹೊಂದಿರುವ ಐವರ ಹೆಸರನ್ನು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದ್ದು, ಸರ್ಕಾರದ ಪಟ್ಟಿಯನ್ನು ತಿರಸ್ಕರಿಸಬೇಕು ಎಂದು ಪ್ರಹ್ಲಾದ್ ಜೋಷಿ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದೆ. ಸುಪ್ರೀಂಕೋರ್ಟ್ ಆದೇಶದಂತೆ ರಾಜಕೀಯ ಹಿನ್ನಲೆ ಹೊಂದಿರುವವರು ಅಥವಾ ಮಾಜಿ ಶಾಸಕರಿಗೆ ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಿಸಲು ಅವಕಾಶವಿಲ್ಲ.
ಜತಗೆ ಅಪರಾಧ ಪ್ರಕರಣಗಳನ್ನು ಹೊಂದಿರುವರು ಸದಸ್ಯರಾಗಿ ನೇಮಕವಾಗಬಾರದು. ಈ ಬಗ್ಗೆ ಹೂಟಾವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ರಾಜ್ಯ ಸರ್ಕಾರವೇ ಹೂಟಾವರದಿ ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಸರ್ಕಾರದ ಶಿಫಾರಸ್ಸು ಪತ್ರ ಕಾನೂನು ಬಾಹಿರ ಎಂದು ರಾಜ್ಯಪಾಲರಿಗೆ ನೀಡಿದ ಮನವಿ ಪತ್ರದಲ್ಲಿ ಹೇಳಲಾಗಿದೆ.
ನಿಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಆರ್.ಅಶೋಕ್, ವಿ ಸೋಮಣ್ಣ, ಲಕ್ಷ್ಮಣ ಸವದಿ, ಸಚೇತಕರಾದ ಸುನೀಲ್ ಕುಮಾರ್, ಗಣೇಶ್ ಕಾರ್ಣಿಕ್, ಶಾಸಕರಾದ ಅಶ್ವತ್ಥ ನಾರಾಯಣ, ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.