ನವದೆಹಲಿ: ಒಂದು ಕಡೆ ದಲಿತ ಸಿಎಂ ಕೂಗು ಎದಿದ್ದರೆ ಮತ್ತೊಂದು ಕಡೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಯುತ್ತಿದ್ದು, ಸಂಸದ ಹಾಗೂ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೇ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇಂದು ದೆಹಲಿಯ ಜನಪಥ್ ನಲ್ಲಿರುವ ಸೋನಿಯಾ ನಿವಾಸಕ್ಕೆ ಭೇಟಿ ನೀಡಿದ ಮುನಿಯಪ್ಪ, ಕಾಂಗ್ರೆಸ್ ಪಕ್ಷದ ಮೇಲಿರುವ ತಮ್ಮ ನಿಷ್ಠೆಯ ಕುರಿತಾಗಿ ಸೋನಿಯಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷದಿಂದ ಏಳು ಬಾರಿ ಸಂಸದನಾಗಿ ಆಯ್ಕೆಯಾಗಿರುವುದು ಮಾತ್ರವಲ್ಲದೆ ಕೇಂದ್ರದಲ್ಲಿ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ತನಗೆ ವಹಿಸಿದ್ದ ಮಂತ್ರಿ ಹುದ್ದೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿರುವ ಕುರಿತಾಗಿ ಮುನಿಯಪ್ಪ ಅವರು ಸೋನಿಯಾ ಅವರಿಗೆ ಮನದಟ್ಟು ಮಾಡಿಕೊಟ್ಟು ಈ ಮೂಲಕ ಈ ಬಾರಿ ರಾಜ್ಯ ಕಾಂಗ್ರೆಸ್ ಸಾರಥ್ಯವನ್ನು ತಮಗೆ ವಹಿಸಿಕೊಡುವಂತೆ ಕೋರಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಾತ್ರವಲ್ಲದೆ ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದಲ್ಲಿ ರಾಜ್ಯದಲ್ಲಿ ಎಲ್ಲ ಕಾಂಗ್ರೆಸ್ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುವ ಭರವಸೆಯನ್ನು ಹಾಗೂ ಮುಂದಿನ ವಿಧಾನಸಸಭಾ ಚುನಾವಣೆಯಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಲ್ಲಿಯೂ ಶ್ರಮಿಸುವುದಾಗಿ ಮುನಿಯಪ್ಪ ಅವರು ಹೇಳಿದ್ದಾರೆ ಎನ್ನಲಾಗಿದೆ.
ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮುನಿಯಪ್ಪ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ತಮ್ಮ ಮನವಿಗೆ ಸೋನಿಯಾ ಗಾಂಧಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲರೊಡನೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರುವುದಾಗಿ ತಿಳಿಸಿದ್ದಾರೆ ಎಂದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos