ರಾಜಕೀಯ

20 ಜಿಲ್ಲೆಗಳಲ್ಲಿ 'ಕೈ'ಗೆ ಅಧಿಕಾರ: ಸಿಎಂ ಸಿದ್ದರಾಮಯ್ಯ

Lingaraj Badiger
ದಾವಣಗೆರೆ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಹರಿಹರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವ ಹೊಂದಿದ್ದು, ಎಲ್ಲರೂ ಶ್ರಮ ವಹಿಸಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು. ಅಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಜನಾಭಿಪ್ರಾಯ ಅಲ್ಲ ಎಂದು ಸಹ ಸಿಎಂ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಸರ್ಕಾರ ಪಂಚಾಯತ್ ರಾಜ್​ಗೆ ಹೆಚ್ಚಿನ ಒತ್ತು ಕೊಟ್ಟಿದೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಿದೆ. 73ನೇ ತಿದ್ದುಪಡಿ, ಶೇ. 50 ರಷ್ಟು ಮಹಿಳಾ ಮೀಸಲಾತಿ ಒದಗಿಸಿರುವುದು ಮತ್ತು ರಮೇಶ್ ಕುಮಾರ್ ಆಯೋಗದ ವರದಿಯ ಕೆಲ ಅಂಶಗಳನ್ನು ಜಾರಿಗೆ ತಂದಿರುವುದು ಕಾಂಗ್ರೆಸ್ ಗೆಲುವಿಗೆ ಪೂರಕವಾಗಿರಲಿದೆಎಂದು ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ವಿಧಾನಸಭೆ ಉಪ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಉಪ ಚುನಾವಣೆ ಗೊಂದಲ ಪರಿಹರಿಸಲು ವೀಕ್ಷಕರನ್ನು ನೇಮಕ ಮಾಡಲಾಗಿದೆ. ಇಂದು ಅಥವಾ ನಾಳೆ ವೀಕ್ಷಕರಿಂದ ವರದಿ ಬಂದ ನಂತರ ಅರ್ಹ ಅಭ್ಯರ್ಥಿಗೆ ಟಿಕೆಟ್ ನೀಡುತ್ತೇವೆ ಎಂದರು.
ಹೆಬ್ಬಾಳ ಕ್ಷೇತ್ರದಲ್ಲಿ ಟಕೆಟ್ ಆಕಾಂಕ್ಷೆಗಳ ಸಂಖ್ಯೆ ಹೆಚ್ಚಿದೆ. ಭೈರತಿ ಸುರೇಶ್ ಕಾಂಗ್ರೆಸ್​ನ ಕೋರ್ ಮೆಂಬರ್. ಅವರನ್ನು ನಾನೇ ಪಕ್ಷಕ್ಕೆ ಬರಮಾಡಿಕೊಂಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ್ ಹೇಳಿಕೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
SCROLL FOR NEXT