ನವದೆಹಲಿ: ಪಕ್ಷದ ಪದಾಧಿಕಾರಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ತಿರುಗಿಬಿದ್ದಿರುವ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರು ಭಾನುವಾರ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಬಿಎಸ್ ವೈ ವಿರುದ್ಧ ದೂರು ನೀಡಿದ್ದಾರೆ.
ಇಂದು ಪಕ್ಷದ ಮುಖ್ಯ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಪಕ್ಷದ ಕಾರ್ಯಕರ್ತರ ಭಾವನೆ ಸೇರಿದಂತೆ ಎಲ್ಲಾ ವಿಷಯಗಳನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ ಎಂದರು.
ಯಡಿಯೂರಪ್ಪ ಅವರು ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದ ಈಶ್ವರಪ್ಪ, ಪದ್ಧತಿ ಪ್ರಕಾರ ಪದಾಧಿಕಾರಿಗಳ ಆಯ್ಕೆ ಸಂಬಂಧ ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚೆಯಾಗಬೇಕು. ಆದರೆ ಅವರು ಚರ್ಚಿಸದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು. ಅಲ್ಲದೆ ಶಿಸ್ತು ಸಮಿತಿ ರಚನೆ ಬಗ್ಗೆಯೂ ಕೋರ್ ಕಮಿಟಿ ಚರ್ಚೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಬಿಜೆಪಿಯಲ್ಲಿ ಎಲ್ಲರೂ ಪಕ್ಷದ ಶಿಸ್ತಿಗೆ ಬದ್ಧವಾಗಿರಬೇಕು. ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ವರಿಷ್ಠರಿಗೆ ಮನವಿ ಮಾಡಿದ್ದೇನೆ. ಈ ಬಗ್ಗೆ ರಾಮ್ ಲಾಲ್ ಅವರ ಸ್ಪಂದನೆ ತಮಗೆ ಖುಷಿ ತಂದಿದೆ ಎಂದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos