ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಹಿ ನೀಡಿ ಅಭಿನಂದಿಸುತ್ತಿರುವ ಬೆಂಬಲಿಗರು
ನವದೆಹಲಿ: ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಖುಲಾಸೆಗೊಂಡಿರುವುದು ಕಾಂಗ್ರೆಸ್ ಗೆ ಆಘಾತ ನೀಡಿದ್ದು, ಬಿಜೆಪಿ ಪಾಲಿಗೆ ಹಬ್ಬವಾಗಿ ಪರಿಣಮಿಸಿದೆ.
ಮಾಜಿ ಮುಖ್ಯಮಂತ್ರಿ ವಿರುದ್ಧದ ಗಂಭೀರ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐಗೆ ಸಾಕಷ್ಟು ಸಾಕ್ಷ್ಯಗಳು ದೊರೆತಿವೆ. ಆದರೂ ತೀರ್ಪು ವ್ಯತಿರಿಕ್ತವಾಗಿ ಬಂದಿರುವುದು ನಮಗೆ ನಿಜಕ್ಕೂ ಅಚ್ಚರಿ ಮತ್ತು ಆಘಾತವಾಗಿದೆ ಎಂದು ಕಾಂಗ್ರೆಸ್ ನಾಯಕ ಸಂಜಯ್ ಜಾಹ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಅಲ್ಲದೆ ಇದರಲ್ಲಿ ರಾಜಕೀಯ ಪ್ರಭಾವ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಹೇಗೆ ನಮೋ ತನಿಖಾ ಸಂಸ್ಥೆಯಾಗಿದೆಯೋ ಅದೇ ರೀತಿ ಮೋದಿ ಸರ್ಕಾರದ ಅಡಿಯಲ್ಲಿ ಬರುವ ಸಿಬಿಐ ಅವರ ಅನುಕೂಲಕರ ತನಿಖಾ ಸಂಸ್ಥೆಯಾಗಿ ಮಾರ್ಪಟ್ಟಿದೆ ಎಂದು ಜಾಹ್ ದೂರಿದ್ದಾರೆ.
ಇನ್ನು ಕೋರ್ಟ್ ನಿರ್ಧಾರವನ್ನು ಸ್ವಾಗತಿಸಿರುವ ಭಾರತೀಯ ಜನತಾ ಪಕ್ಷ, ಯಡಿಯೂರಪ್ಪ ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಕೋರ್ಟ್ ಖುಲಾಸೆಗೊಳಿಸಿರುವುದು ನಮಗೆ ಖುಷಿ ತಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ ಅವರು ಹೇಳಿದ್ದಾರೆ.
ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ರಾಜಕೀಯ ಪ್ರೇರಿತವಾದದ್ದು ಎಂದು ಶರ್ಮಾ ತಿಳಿಸಿದ್ದಾರೆ.
ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ಯಡಿಯೂರಪ್ಪ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದ್ದು, ಬಿಎಸ್ ವೈ ಸೈರಿದಂತೆ ಎಲ್ಲಾ 13 ಆರೋಪಿಗಳನ್ನು ಖುಲಾಸೆಗೊಳಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos