ರಾಜಕೀಯ

ಸೋಲಿನ ಪರಮಾರ್ಶೆ ನಡೆಸುತ್ತೇವೆ: ಬಿ.ಎಸ್. ಯಡಿಯೂರಪ್ಪ

Manjula VN
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದ ಎರಡು ಕ್ಷೇತ್ರದ ಉಪಚುನಾವಣೆಯಲ್ಲಿಯೂ ಬಿಜೆಪಿ ಸೋಲು ಕಂಡಿರುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ತೀವ್ರ ಆಘಾತವನ್ನು ತಂದಿದೆ. 
ಉಪ ಚುನಾವಣೆ ಸೋಲು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರು, ಸೋಲನ್ನು ನಿರೀಕ್ಷಿಸಿರಲಿಲ್ಲ. ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಅವರ ಸೋಲು ನಿಜಕ್ಕೂ ನೋವನ್ನು ತಂದಿದೆ. ಜನಾದೇಶವನ್ನು ನಾವು ಗೌರವಿಸುತ್ತೇವೆಂದು ಹೇಳಿದ್ದಾರೆ. 
ಸಾಕಷ್ಟು ಶ್ರಮದ ನಡುವೆಯು ಸೋಲನ್ನು ಕಂಡಿರುವ ಕುರಿತಂತೆ ಪರಮಾರ್ಶೆ ನಡೆಸುತ್ತೇವೆ. ಜನರ ವಿಶ್ವಾಸವನ್ನು ಸಂಪೂರ್ಣವಾಗಿ ಗಳಿಸುವಲ್ಲಿ ನಾವು ಯಶಸ್ವಿಯಾಗಿಲ್ಲ. ಈ ಹಿಂದಿನ ಚುನಾವಣೆಗಳಿಗೆ ಹೋಲಿಕೆ ಮಾಡಿದರೆ, ಈ ಬಾರಿ ಮತಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. 
ಉಪ ಚುನಾವಣೆ 2018ರ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಲ್ಲ: ಹೆಚ್.ಡಿ.ಕೆ
ಎರಡು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ 2018ರ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಲ್ಲ ಎಂದು ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. 
ಉಪಚುನಾವಣೆ ಫಲಿತಾಂಶ ಹೊರಬಿದ್ದಿರುವ ಹಿನ್ನಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದು ದೊಡ್ಡ ಯಶಸ್ಸೇನಲ್ಲ. ಎಸ್.ಎಂ.ಕೃಷ್ಣ ಅವರ ಅಧಿಕಾರವಧಿಯಲ್ಲಿದ್ದ ಅಂದಿನ ಕಾಂಗ್ರೆಸ್ ಹನಗುಂದ ಮತ್ತು ಹುಮ್ನಾಬಾದ್ ಎರಡು ಕ್ಷೇತ್ರಗಳಲ್ಲಿ ಗೆಲವು ಸಾಧಿಸಿತ್ತು. 6 ತಿಂಗಳ ಬಳಿಕ ಸಾಮಾನ್ಯ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿತ್ತು. 
ಉಪಚುನಾವಣೆಯ ಫಲಿತಾಂಶ ಪಕ್ಷದ ಶಕ್ತಿಯಾಗಲೀ ಅಥವಾ ಸರ್ಕಾರದ ಸಾಧನೆಯ ಮೇಲೆ ಪರಿಣಾಮ ಬೀರುವುದಿಲ್ಲ. ಚುನಾವಣೆ ನಡೆಸುವ ಪ್ರಚಾರ ಎಷ್ಟರಮಟ್ಟಿಗಿತ್ತು ಎಂಬುದರ ಮೇಲೆ ಫಲಿತಾಂಶ ನಿಂತಿರುತ್ತದೆ ಎಂದು ತಿಳಿಸಿದ್ದಾರೆ. 
SCROLL FOR NEXT