ಸುದ್ದಿಗೋಷ್ಠಿ ಮುಗಿಸಿ ಬರುತ್ತಿರುವ ಅಮಿತ್ ಶಾ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ದೇಶದ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕ. ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮೆಡಲ್ ಕೊಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಸಿಎಂ ಆರೋಪಿಸುತ್ತಾರೆ. ಆದರೆ ಯುಪಿಎ ಸರ್ಕಾರ ನೀಡಿದ ಅನುದಾನಕ್ಕಿಂತ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಕರ್ನಾಟಕಕ್ಕೆ ವಿವಿಧ ಯೋಜನೆಗಳಡಿ ಹೆಚ್ಚಿನ ಅನುದಾನ ನೀಡಿದೆ ಎಂದು ಅವರು ಹೇಳಿದ್ದಾರೆ.
14ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕ 2.19 ಲಕ್ಷ ಕೋಟಿ, 13ನೇ ಹಣಕಾಸು ಆಯೋಗದಡಿ 88,583 ಕೋಟಿ ಹಣವನ್ನು ರಾಜ್ಯ ಪಡೆದುಕೊಂಡಿದೆ. ಇದನ್ನು ಹೊರತು ಪಡಿಸಿ, ಮುದ್ರಾ, ಸ್ಮಾರ್ಟ್ ಸಿಟಿ, ಅಮೃತ್, ಬೆಂಗಳೂರು ಮೆಟ್ರೋ ಸೇರಿದಂತೆ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ 7,90,396 ಕೋಟಿ ರು ಹಣ ನೀಡಿದೆ ಎಂದು ಅಮಿತ್ ಶಾ ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ.
ಬಡವರು, ರೈತರು, ದಲಿತರಿಗೆ ಕೇಂದ್ರ ಸರ್ಕಾರ ಕೊಡುತ್ತಿರುವ ಅನುದಾನ ಎಲ್ಲಿ ಹೋಗುತ್ತಿದೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಸೂಕ್ತ ಉತ್ತರವನ್ನು ಜನರಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದಿನ ಯುಪಿಎ ಸರ್ಕಾರ ಕೂಡಾ ಭ್ರಷ್ಟಾಚಾರದಲ್ಲೇ ಮುಳುಗಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲ ಎಂದು ಹೇಳಿದರು.
ಡಿಕೆಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾದ ಬಳಿಕ ಅವರು ತಮ್ಮ ಸ್ಥಾನಕ್ಕೆ ಯಾಕೆ ರಾಜೀನಾಮೆ ಕೊಡಲಿಲ್ಲ? ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವರನ್ನು ಸಂಪುಟದಲ್ಲಿ ಏಕೆ ಇನ್ನು ಉಳಿಸಿಕೊಂಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಆರ್ ಎಸ್ ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಕೊಲೆಗಳು ನಡೆಯುತ್ತಿವೆ.ಇದಕ್ಕೆ ರಾಜ್ಯ ಸರ್ಕಾರದ ಕುಮ್ಮಕ್ಕೇ ಕಾರಣ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos