ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಿಂದ ಜಾತ್ಯತೀತ ಜನತಾದಳ ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ದಲಿತರಿಗೆ ಪ್ರತ್ಯೇಕ ಬಜೆಟ್ ಮಂಡಿಸಲಾಗುವುದು ಎಂದು ಕೂಡ ಹೇಳಿದರು.
ಅವರು ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಗಳ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ 70 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ 7,000 ರೂಪಾಯಿ ಗೌರವಧನ, ರೈತರು ರೈತ ಸಾಲಗಳ ಮೇಲೆ ಅವಲಂಬಿತರಾಗಿರಬಾರದು ಎಂದು ಹೊಸ ಕೃಷಿ ತಂತ್ರಜ್ಞಾನ ಮತ್ತು ಉಪ ಮುಖ್ಯಮಂತ್ರಿ ಹುದ್ದೆಯನ್ನು ದಲಿತರಿಗೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಸಂಘರ್ಷ ಮತ್ತು ಲಿಂಗಾಯತರಿಗೆ ಪ್ರತ್ಯೇಕ ಧಾರ್ಮಿಕ ಸ್ಥಾನಮಾನಕ್ಕಾಗಿ ಹೋರಾಟ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡೂ ವಿಭಜನಾತ್ಮಕ ತಂತ್ರಗಳನ್ನು ಬಳಸಿಕೊಳ್ಳುತ್ತಿವೆ. ಅಧಿಕಾರದಲ್ಲಿ ಮರಳಲು ಬಿಜೆಪಿ ಹಿಂದುತ್ವವನ್ನು ಬಳಸಿಕೊಂಡರೆ, ಕಾಂಗ್ರೆಸ್ ಲಿಂಗಾಯತ ಸಮುದಾಯವನ್ನು ಒಡೆಯಲು ನೋಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ನೀಡಿರುವ ಭರವಸೆಗಳು ಮತ್ತು ಚುನಾವಣಾ ಆಶ್ವಾಸನೆಗಳು ಈಡೇರದೆ ಹಾಗೆಯೇ ಉಳಿದುಕೊಂಡಿವೆ. ಗ್ರಾಮೀಣ ಪ್ರದೇಶದ ಜನತೆಯನ್ನು ಇನ್ನು ಕೂಡ ತಲುಪಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 150 ಈಡೇರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಗ್ರಾಮೀಣ ಪ್ರದೇಶದ ಆರ್ಥಿಕತೆಯಲ್ಲಿ ಸುಧಾರಣೆಯಾಗಿದೆಯೇ ಎಂದು ಪ್ರಶ್ನಿಸಿದರು.
ವಿವಿಧ ಯೋಜನೆಗಳಿಗೆ ಹಣವನ್ನು ಹೇಗೆ ಬಳಸಲಾಗಿದೆ ಎಂಬುದರ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕೆಂದು ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos