ಬೆಂಗಳೂರು: ಭೂಪಸಂದ್ರ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಬಿಜೆಪಿ ನಾಯಕರು ರಾಜ್ಯಪಾಲರ ಮೇಲೆ ಒತ್ತಡ ತರುತ್ತಿದ್ದಾರೆ. ಈ ಮೂಲಕ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಕಾಂಗ್ರೆಸ್ ಸೋಮವಾರ ಆರೋಪ ಮಾಡಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಎಂಎಲ್'ಸಿ ಉಗ್ರಪ್ಪ ಅವರು, ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜವಡೇಕರ್ ಅವರು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡುವಂತೆ ಒತ್ತಡ ಹಾಕಲು ರಾಜ್ಯಪಾಲರನ್ನು ಗೌಪ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಈ ಮೂಲಕ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ನಾಯಕರು ಷಡ್ಯಂತ್ರ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಒಂದು ಅಡಿ ಪ್ರದೇಶವನ್ನು ಡಿನೋಟಿಫಿಕೇಷನ್ ಮಾಡಿಲ್ಲ. ಈ ಬಗ್ಗೆ ಹಲವು ಬಾರಿ ಸ್ಪಷ್ಟನೆನೀಡಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿರುವುದಲ್ಲದೇ ಇದೀಗ ರಾಜಭಾವನದ ಮೇಲೆ ಒತ್ತಡ ಹೇರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆಂದು ಆರೋಪ ಮಾಡಿದ್ದಾರೆ.
ಗಣಿ ಲೂಟಿ ಮಾಡಿ ರಾಜ್ಯದ ಮಾನ ಮರ್ಯಾದೆ ಹಾಳು ಮಾಡಿದವರು ಬಿಜೆಪಿಯವರು, ಮುಖ್ಯಮಂತ್ರಿಯಾಗಿದ್ದಾಗಲೇ ಜೈಲಿಗೆ ಹೋಗಿದ್ದರು. ಅತ್ಯಂತ ಕೆಳಮಟ್ಟಕ್ಕೆ ಇಳಿದವರು ಬಿಜೆಪಿಯವರು. ಇದೀಗ ಸರ್ಕಾರದ ಮೇಲೆ ಯಾವುದೇ ಆರೋಪಗಳು ಇಲ್ಲದ ಕಾರಣ ಸುಳ್ಳು ಪ್ರಚಾರಕ್ಕೆ ಇಳಿದಿದ್ದಾರೆ ಎಂದು ತಿಳಿಸಿದ್ದಾರೆ.
ಬಳಿಕ ಮಾತನಾಡಿರುವ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರು, ಬಿಜೆಪಿಯಿಂದ ರಾಜಭವನ ದುರ್ಬಳಕೆಯ ಮುನ್ಸೂಚನೆ ದೊರಕಿದೆ. ರಾಜ್ಯಪಾಲರು ಬಿಜೆಪಿ ನಾಯಕರ ಒತ್ತಡಕ್ಕೆ ಮಣಿಯಬಾರದು ಎಂದಿದ್ದಾರೆ.
ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜವಡೇಕರ್ ಅವರು, ಬಿಜೆಪಿ ವಿರುದ್ಧ ಮಾತನಾಡಲು ಬೇರಾವುದೇ ವಿಚಾರಗಳು ಸಿಗದ ಕಾರಣ ಕಾಂಗ್ರೆಸ್ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ. ಕಾಂಗ್ರೆಸ್ ನಾಯಕರು ಹೇಳುತ್ತಿರುವಂತೆ ನಾವು ಯಾವುದೇ ರೀತಿಯ ಭೇಟಿಗಳನ್ನು ಮಾಡಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos