ಕೋಲಾರ: ಮಹದಾಯಿ ವಿವಾದ ಇತ್ಯಾರ್ಥಪಡಿಸುವ ಬಗ್ಗೆ ಬಿಜೆಪಿಗೆ ನಿಜಕ್ಕೂ ಕಾಳಜಿ ಇದ್ದರೆ ಕರ್ನಾಟಕಕ್ಕೆ ನೀರು ಬಿಡಿಸುವುದಾಗಿ ಮಹದಾಯಿ ನದಿ ನೀರು ಹಂಚಿಕೆ ನ್ಯಾಯಾಧೀಕರಣಕ್ಕೆ ಅಫಿಡವಿಟ್ ಸಲ್ಲಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸವಾಲು ಹಾಕಿದ್ದಾರೆ.
ಇಂದು ಕೋಲಾರ ಜಿಲ್ಲೆಯ ಬಾಗೆಪಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿಯವರಿಗೆ ತಾಕತ್ತಿದ್ದರೆ ಮಹದಾಯಿ ನ್ಯಾಯಾಧೀಕರಣಕ್ಕೆ ಅಫಿಡವಿಟ್ ಸಲ್ಲಿಸಲಿ ಎಂದರು.
ಜಗದೀಶ್ ಶೆಟ್ಟರ್ ಅವರಿಗೆ ಸ್ವಲ್ಪವಾದರೂ ಕಾನೂನಿನ ಜ್ಞಾನ ಇದೆಯೇ? ಒಂದು ರಾಜ್ಯದ ಮುಖ್ಯಮಂತ್ರಿ ಮತ್ತೊಂದು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆಯುವುದು ಶಿಷ್ಟಾಚಾರ. ಆದರೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಅಷ್ಟಕ್ಕು ಯಡಿಯೂರಪ್ಪ ಯಾರ್ರಿ? ಅವರು ಕೇವಲ ಒಂದು ರಾಜಕೀಯ ಪಕ್ಷದ ರಾಜ್ಯಾಧ್ಯಕ್ಷ ಅಷ್ಟೆ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಮಹದಾಯಿ ವಿವಾದ ಸಂಬಂಧ ಬಿಎಸ್ ವೈ ಪತ್ರ ಬರೆದ ಗೋವಾ ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ, ಪರಿಕ್ಕರ್ ಅವರಿಗೆ ಸಭ್ಯತೆ ಇಲ್ಲ. ಶಿಷ್ಟಾಚಾರ ಉಲ್ಲಂಘಿಸಿ ತಮ್ಮ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುವುದು ಸರಿಯೇ? ಎಂದು ಪ್ರಶ್ನಿಸಿದ್ದಾರೆ.
ಕಳೆದ ವಾರ ಮಹದಾಯಿ ವಿವಾದ ಸಂಬಂಧ ಮನೋಹರ್ ಪರಿಕ್ಕರ್ ಅವರು ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಕರ್ನಾಟಕಕ್ಕೆ ಕುಡಿಯುವ ನೀರು ಬಿಡಲು ಗೋವಾದ ತಾತ್ವಿಕ ಒಪ್ಪಿಗೆ ಎಂದು ಹೇಳಿದ್ದರು. ಇದು ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos