ಬೆಂಗಳೂರು: ಮುಂದಿನ ವರ್ಷ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಕೆಪಿಸಿಸಿ ಅಧ್ಯಕ್ಷಗಾದಿಗೆ ಪ್ರಭಾವಿ ನಾಯಕರೊಬ್ಬರನ್ನು ತರುವ ಚಿಂತನೆ ನಡೆಸಿದೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಗಾದಿಗೆ ತೀವ್ರ ಪೈಪೋಟಿ ಆರಂಭವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಪ್ರಬಲ ಸಮುದಾಯದ ಮುಖಂಡರೊಬ್ಬರಿಗೆ ಮುಂದಿನ ಚುನಾವಣೆಯ ನಾಯಕತ್ವ ನೀಡುವ ಸಾಧ್ಯತೆ ಇದ್ದು, ಒಕ್ಕಲಿಕ ನಾಯಕ, ಇಂಧನ ಸಚಿವ ಡಿ,ಕೆ.ಶಿವಕುಮಾರ್ ಅಥವಾ ಮತ್ತೊಬ್ಬ ದಲಿತ ನಾಯಕ ಕೆ.ಎಚ್.ಮುನಿಯಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚಿಂತನೆ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇನ್ನು ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಎರಡು ಅವಧಿ ಪೂರೈಸಿರುವ ಗೃಹ ಸಚಿವ ಪರಮೇಶ್ವರ ಅವರು ಸಹ ಮತ್ತೊಂದು ಅವಧಿಗೆ ಮುಂದುವರೆಯುವ ಯತ್ನ ನಡೆಸಿದ್ದು, ಅದಕ್ಕಾಗಿ ಅವರು ಸಚಿವ ಸ್ಥಾನ ತೊರೆಯಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. ಅಲ್ಲದೆ ಅವರ ಕೆಲವು ಬೆಂಬಲಿಗ ಶಾಸಕರು ಮುಂದಿನ ಅವಧಿಗೂ ಪರಮೇಶ್ವರ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರೆಸುವಂತೆ ಒತ್ತಾಯಿಸಿದ್ದಾರೆ.
ನಿನ್ನೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ಶಾಸಕರಾದ ಕೆ.ಎನ್. ರಾಜಣ್ಣ, ರಫೀಕ್ ಅಹಮದ್ ಹಾಗೂ ಸಂಸದ ಮುದ್ದಹನುಮೇಗೌಡ ಅವರು, ಪರಮೇಶ್ವರ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ, ಮುಂಬರುವ ಚುನಾವಣೆ ಸಿಎಂ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರ ನೇತೃತ್ವದಲ್ಲಿಯೇ ನಡೆಯಲಿ ಎಂದು ಮನವಿ ಮಾಡಿದ್ದರು.
ಈ ಮಧ್ಯೆ ಪರಮೇಶ್ವರ ಅವರು ಈ ಸಂಬಂಧ ಇಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ. ಖರ್ಗೆ ಅವರು ಅಧ್ಯಕ್ಷರಾಗಿ ಮುಂದುವರೆಯುವಂತೆ ಹೇಳಿದ್ದಾರೆ ಎಂದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos