ರಾಜಕೀಯ

ಅನಂತ್ ಕುಮಾರ ಹೆಗಡೆ ಕೇಂದ್ರ ಸಚಿವರಾಗಲು ನಾಲಾಯಕ್: ಸಚಿವ ರೇವಣ್ಣ

Lingaraj Badiger
ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ರಾಜ್ಯ ಸಚಿವ ಅನಂತ ಕುಮಾರ್ ಹೆಗಡೆ ಅವರ ನಾಲಗೆ ಎಕ್ಕಡ‌ ಸಮಾನ‌ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಅವರು ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ಓಟು, ಸೀಟಿಗಾಗಿ ಸಿಎಂ ಸಿದ್ದರಾಮಯ್ಯ ಮತ್ತೊಬ್ಬರ ಬೂಟು ನೆಕ್ಕಲು ಹಿಂಜರಿಯುವದಿಲ್ಲ ಎಂಬ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ ಅವರು, ಅನಂತ್ ಕುಮಾರ ಹೆಗಡೆ ಕೇವಲ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ. ಅವರು ಕೇಂದ್ರ ಸಚಿವರಾಗಲು ಅವರು ನಾಲಾಯಕ್ ಎಂದು ಜರೆದರು.
ಹೆಗಡೆ ರಾಜ್ಯದೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡುವುದನ್ನು ಬಿಟ್ಟು, ಜನಪರ ಕೆಲಸ ಮಾಡುತ್ತಿರುವ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುವಾಗ ನಾಲಗೆ ಮೇಲೆ ಹಿಡಿತವಿರಬೇಕು ಎಂದು ರೇವಣ್ಣ ಎಚ್ಚರಿಕೆ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿದ ಅನಂತ ಕುಮಾರ ಹೆಗಡೆ ಅವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಮತ್ತು ಈ ಸಂಬಂಧ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ರೇವಣ್ಣ ಆಗ್ರಹಿಸಿದ್ದಾರೆ.
SCROLL FOR NEXT