ಬೆಳಗಾವಿ: ಕಳೆದ 10 ದಿನಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನಕ್ಕೆ ಅಧಿಕೃತ ತೆರೆ ಬಿದ್ದಿದೆ. ಪ್ರತಿಪಕ್ಷಗಳ ತೀವ್ರ ಕೋಲಾಹಲ, ಗದ್ದಲದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಇಂದು ಬೆಳಗ್ಗೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಚಿವ ವಿನಯ್ ಕುಲಕರ್ಣಿ ಅವರು ರಾಜಿನಾಮೆ ನೀಡಬೇಕು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಈ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು ಧರಣಿ ನಡೆಸಿದರು.
ಬಿಜೆಪಿ ಸದಸ್ಯರ ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಎರಡು ಬಾರಿ ಕಲಾಪವನ್ನು ಮುಂದೂಡಿದ ನಂತರ ಅಂತಿಮವಾಗಿ ಸದನವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದರು. ಇದರೊಂದಿಗೆ ಕೊನೆಯ ದಿನದ ಕಲಾಪವೂ ಸಹ ಯಾವುದೇ ಗಂಭೀರ ಚರ್ಚೆ ಇಲ್ಲದೆ ಗದ್ದಲಕ್ಕೆ ಬಲಿಯಾಯಿತು.
ಇನ್ನು ವಿಧಾನ ಪರಿಷತ್ ನಲ್ಲೂ ಪ್ರತಿಪಕ್ಷಗಳ ತೀವ್ರ ಕೋಲಾಹಲದ ಹಿನ್ನೆಲೆಯಲ್ಲಿ ಸಭಾಪತಿ ಡಿಎಚ್ ಶಂಕರಮೂರ್ತಿ ಅವರು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.
ಬೆಳಗಾವಿಯಲ್ಲಿ ನಡೆದ 10 ದಿನಗಳ ಕಲಾಪದಲ್ಲಿ 40 ಗಂಟೆ 45 ನಿಮಿಷಗಳ ಕಾಲ ಮಾತ್ರ ಚರ್ಚೆ ನಡೆದಿದ್ದು, ಉತ್ತರ ಕರ್ನಾಟಕದ ಬಗ್ಗೆ ಕೇವಲ 5 ಗಂಟೆಗಳ ಕಾಲ ಚರ್ಚೆ ನಡೆದಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos