ಸಭೆಯಲ್ಲಿ ಕೆ.ಸಿ ವೇಣುಗೋಪಾಲ್, ಪರಮೇಶ್ವರ್, ಮತ್ತು ದಿನೇಶ್ ಗುಂಡೂರಾವ್
ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕಿಡಿಕಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಪಕ್ಷ ಮುಂದಿನ ಚುನಾವಣೆ ಎದುರಿಸಲಿದ್ದು, ಈ ವಿಷಯದಲ್ಲಿ ಗೊಂದಲದ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಗಡಸು ಧ್ವನಿಯಲ್ಲೇ ಮಾತನಾಡಿದ ಅವರು, ‘ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಲಾಗುವುದು ಎಂದು ಪಕ್ಷದ ಹೈಕಮಾಂಡ್ ಬಹಳ ಹಿಂದೆಯೇ ಸ್ಪಷ್ಟಪಡಿಸಿದೆ. ಹಾಗಿದ್ದರೂ ಕೆಲವರು ಅನಗತ್ಯ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವುದು ಪಕ್ಷದ ವರಿಷ್ಠರ ಗಮನಕ್ಕೆ ಬಂದಿದೆ. ಇನ್ನು ಮುಂದೆ ಇದನ್ನು ಸಹಿಸುವುದಿಲ್ಲ’ ಎಂದಿದ್ದಾರೆ.
ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಯಾವುದೇ ಶಾಸಕರು ತಲೆ ಕೆಡಿಸಿಕೊಳ್ಳುವುದು ಬೇಡ. ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಮುಂದಿರುವ ಏಕೈಕ ಗುರಿ. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಗೆಲ್ಲುವ ಕಡೆ ಗಮನ ಹರಿಸಿ ಎಂದು ಖಡಕ್ ಸಂದೇಶ ನೀಡಿದ್ದಾರೆ.
ಸಿಎಂ ಹುದ್ದೆ ಆಕಾಂಕ್ಷಿಗಳಾಗಿರುವ ಹಲವು ಕೈ ನಾಯಕರು ಮುಂದಿನ ಸಿಎಂ ಯಾರು ಎಂಬ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿ ಗೊಂದಲ ಸೃಷ್ಠಿಸುತ್ತಿರುವ ಹಿನ್ನೆಲೆಯಲ್ಲಿ ವೇಣುಗೋಪಾಲ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos