ರಾಜಕೀಯ

ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕ್ರಮ: ಕಾಂಗ್ರೆಸ್ ಗೆ ಅನಂತ್ ಕುಮಾರ್ ಎಚ್ಚರಿಕೆ

Sumana Upadhyaya

ಬೆಂಗಳೂರು: ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಕಲಾಪಗಳಿಗೆ ಅಡ್ಡಿಪಡಿಸಿದರೆ ಕಾಂಗ್ರೆಸ್ ಪಕ್ಷದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು  ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ಕಲಾಪಗಳಿಗೆ ಅಡ್ಡಿಪಡಿಸುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ. ಆದರೆ ಮುಂಗಾರು ಅಧಿವೇಶನದಲ್ಲಿ ಹಾಗೆ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಎನ್ ಡಿಎ ಮೈತ್ರಿಕೂಟದ 325 ಸಂಸದರು ಸಂಸತ್ ಕಲಾಪಗಳು ನಡೆಯದಂತೆ ಅಡ್ಡಿಪಡಿಸುವುದರ ವಿರುದ್ಧ ನಿನ್ನೆ ನಡೆಸಿದ ದಿನವಿಡೀ ಉಪವಾಸ ಮುಷ್ಕರವನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಸಂಸದರಾದ ಡಿ.ವಿ.ಸದಾನಂದ ಗೌಡ, ಅನಂತ್ ಕುಮಾರ್, ಪಿ.ಸಿ.ಮೋಹನ್ ಕೇಂದ್ರ ಸಚಿವ ಪ್ರಕಾಶ್ ಜಾವದೇಕರ್ ಅವರ ನೇತೃತ್ವದಲ್ಲಿ ನಿನ್ನೆ ಬೆಂಗಳೂರಿನಲ್ಲಿ ಉಪವಾಸ ಮುಷ್ಕರ ನಡೆಸಿದರು. ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡ ಹುಬ್ಬಳ್ಳಿಯಲ್ಲಿ ನಿನ್ನೆ ಪ್ರತಿಭಟನೆ ನಡೆಸಿದರು.

ಬೆಂಗಳೂರಿನಲ್ಲಿ ನಿನ್ನೆ ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಆನಂದ್ ರಾವ್ ಸರ್ಕಲ್ ನಲ್ಲಿ ಬೆಳಗ್ಗೆ 10ರಿಂದ ಸಾಯಂಕಾಲ 5 ಗಂಟೆಯವರೆಗೆ ಬಿಜೆಪಿಯ ಸುಮಾರು 200 ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಡಿ.ವಿ.ಸದಾನಂದ ಗೌಡ, ಮುಂದಿನ ಬಾರಿಯೂ ಕಲಾಪಕ್ಕೆ ಅಡ್ಡಿಪಡಿಸಿದರೆ ಸದನದಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ಹೊರಹಾಕುವ ಎಚ್ಚರಿಕೆಯನ್ನು ಸಂಸದೀಯ ವ್ಯವಹಾರಗಳ ಸಚಿವರು ನೀಡಬೇಕೆಂದು ಒತ್ತಾಯಿಸಿದರು.

SCROLL FOR NEXT