ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ಟಿಕೆಟ್ ವಿಚಾರವಾಗಿ ಮಾಧ್ಯಮಗಳಲ್ಲಿ ಬಿಂಬಿತಗೊಂಡಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ನಾನು ಕುಸ್ತಿಯಾಡಿಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ವಿನಾಕಾರಣ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಬಿತ್ತರಿಸಲಾಗುತ್ತಿದೆ. ಟಿಕೆಟ್ ಪಡೆಯುವಲ್ಲಿ ಸಿದ್ಧರಾಮಯ್ಯ ಮೇಲುಗೈ. ಮೌನಕ್ಕೆ ಶರಣಾದ ಖರ್ಗೆ ಎಂಬಿತ್ಯಾದಿಯಾಗಿ ಸುದ್ದಿ ಮಾಡಲಾಗುತ್ತಿದೆ. ಎಲ್ಲವೂ ಅವರವರ ಕಲ್ಪನೆಗೆ ಅನುಗುಣವಾಗಿ ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ವಿಷಯಕ್ಕೆ ತಾವು ಬ್ರೇಕ್ ಹಾಕಿದ್ದೇವೆ ಎಂಬುದು ಮಾಧ್ಯಮಗಳ ಸೃಷ್ಟಿ ಎಂದು ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು. ಸಿದ್ಧರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಹೇಳಿಲ್ಲ. ಎರಡು ಕಡೆ ಟಿಕೇಟ್ ಸಹ ಕೇಳಿಲ್ಲ. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಪ್ರಶ್ನೆ ಬರುವುದಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಮತ್ತು ಬಾದಾಮಿಯಿಂದ ಸ್ಪರ್ಧಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಎರಡು ಕಡೆ ಸ್ಪರ್ಧಿಸುವುದು ಬೇಡ ಅಂತ ನಾನು ಕೂಡ ಅವರಿಗೆ ಹೇಳಿಲ್ಲ. ಆದರೂ ಈ ಬಗ್ಗೆ ಊಹಾಪೋಹ ಕೇಳಿ ಬಂದಿದೆ ಎಂದರು.
ಟಿಕೆಟ್ ಸಿಗದ ಕಾರಣ ಕೆಲವರಲ್ಲಿ ಅಸಮಾಧಾನ ಉಂಟಾಗಿರುವುದು ನಿಜ. ಎಲ್ಲವನ್ನೂ ಹೈಕಮಾಂಡ್ ಬಗೆಹರಿಸಲಿದೆ’ ಎಂದರು. ಸ್ವತಃ ರಾಹುಲ್ ಗಾಂಧಿ ಅವರೇ ಅಸಮಾಧಾನಗೊಂಡವರ ಸಮಸ್ಯೆಗಳನ್ನು ಆಲಿಸಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos