ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಪ್ರಚಾರ ಕಣದಿಂದ ಹಿಂದಕ್ಕೆ ಕಳುಹಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಜನಾರ್ದನ ರೆಡ್ಡಿ ಅವರು ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು ಈ ವಿಚಾರ ರಾಷ್ಟ್ರೀಯ ಮಾಧ್ಯಮಗಳಲ್ಲೂ ಚರ್ಚೆಯಾಗಿ ಬಿಜೆಪಿಗೆ ಭಾರಿ ತಲೆನೋವು ತಂದಿಟ್ಟಿತ್ತು. ಕಾಂಗ್ರೆಸ್ ಕೂಡ ಇದೇ ವಿಚಾರವನ್ನು ಬಿಜೆಪಿ ವಿರುದ್ಧ ಅಸ್ತ್ರವನ್ನಾಗಿ ಬಳಸಿತ್ತು.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಜನಾರ್ದನ ರೆಡ್ಡಿ ಅವರು ಬೆಂಗಳೂರಿಗೆ ವಾಪಾಸಾಗಿದ್ದಾರೆ ಎಂದು ವರದಿಯಾಗಿದೆ. ಕಳೆದ ಒಂದು ವಾರದಿಂದ ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ಪರ ಭರ್ಜರಿ ಪ್ರಚಾರ ನಡೆಸಿದ್ದರು. ನಿನ್ನೆಯಿಂದ ಅವರು ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ ಎಂದು ತಿಳಿದುಬಂದಿದೆ.
ಈ ಹಿಂದೆ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅವರು ಜನಾರ್ದನ ರೆಡ್ಡಿ ನಮ್ಮ ಸ್ಟಾರ್ ಪ್ರಚಾರಕರಲ್ಲ. ಅವರು ಸ್ನೇಹತರ ಪರ ಪ್ರಚಾರ ನಡೆಸುತ್ತಾರೆ ಅಷ್ಟೇ ಎಂದು ಹೇಳಿದ್ದರು.