ರಾಜಕೀಯ

ತಪ್ಪಾಗಿದೆ ಬಿಡಿ: ಬಿಸ್ಕೆಟ್‌ ಎಸೆದ ಬಗ್ಗೆ ಕ್ಷಮೆ ಕೇಳಿದ ಸಚಿವ ರೇವಣ್ಣ

Lingaraj Badiger
ಬೆಂಗಳೂರು: ಪ್ರವಾಹ ಸಂತ್ರಸ್ತರಿಗೆ ಬಿಸ್ಕೆಟ್ ಪ್ಯಾಕೆಟ್ ಗಳನ್ನು ಎಸೆದು ತೀವ್ರ ಟೀಕೆಗೆ ಗುರಿಯಾಗಿರುವ ಸಚಿವ ರೇವಣ್ಣ ಅವರು ಮಂಗಳವಾರ ಕ್ಷಮೆ ಕೇಳಿದ್ದು, ಒಳ್ಳೆ ಕೆಲಸ ಮಾಡುವಾಗ ಇದೆಲ್ಲಾ ಸಾಮಾನ್ಯ. ಜನತೆ ಕ್ಷಮೆ ಕೇಳಬೇಕು ಅಂದ್ರೆ ಕೇಳ್ತೀನಿ ಎಂದು ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಹಸಿವಿನಿಂದ ಮಕ್ಕಳು ಹಾಗೂ ಮಹಿಳೆಯರು ಬಿಸ್ಕೆಟ್ ಕೇಳುತ್ತಿದ್ದರು. ಹೀಗಾಗಿ ದೂರದಲ್ಲಿ ಕುಳಿತವರಿಗೆ ಬಿಸ್ಕೆಟ್ ಎಸೆದಿರುವೆ. ಈ ಕುರಿತಾಗಿ ಜನತೆ ಕ್ಷಮೆ ಕೇಳಬೇಕು ಎಂದರೆ ಕೇಳುತ್ತೇನೆ ಎಂದು ಲೋಕೋಪಯೋಗಿ ಸಚಿವರು ತಿಳಿಸಿದ್ದಾರೆ.
ನಾನು ದೇವರನ್ನು ನಂಬುವ ವ್ಯಕ್ತಿ. ಬೇಕು ಅಂತ ಬಿಸ್ಕೆಟ್ ಎಸೆದಿಲ್ಲ. ಆ ರೀತಿಯ ಮನೋಭಾವನೆಯೂ ನನ್ನಲ್ಲಿ ಇಲ್ಲ. ಘಟನೆಯಾದ ಮಾರನೇ ದಿನ ಸುದ್ದಿ ಮಾಡಲಾಗಿದೆ. ನನ್ನಿಂದ ತಪ್ಪಾಗಿದೆ ಬಿಡಿ ಎಂದರು.
ಕೊಡಗಿನಲ್ಲಿ ಕಳೆದ 25 ವರ್ಷಗಳಿಂದ ಆಯ್ಕೆಯಾಗಿರುವ ನಾಯಕರು ಹಾಗೂ ಕೇಂದ್ರ ಸಚಿವರು ಸಂತ್ರಸ್ತರ ನೆರವಿಗೆ ಬರಲಿಲ್ಲ. ಇಂತಹ ಸಂದರ್ಭದಲ್ಲಿ ನಾನು ನೆರವಿಗೆ ನಿಂತಿದ್ದೆ. ಈಗ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ರೇವಣ್ಣ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದರು.
ನಾನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವನಲ್ಲ. ಆದರೂ ಹಗಲು, ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದೇನೆ. ಮೂರು ಸಾವಿರ ಹಾಲಿನ ಪ್ಯಾಕೇಟ್‌ ವಿತರಿಸಿದ್ದೇನೆ ಎಂದು ರೇವಣ್ಣ ಹೇಳಿದರು.
ಹಾಸನದ ರಾಮನಾಥಪುರ ಸಂತ್ರಸ್ತ್ರರ ಕೇಂದ್ರದಲ್ಲಿ ರೇವಣ್ಣ ಅವರು ಬಿಸ್ಕೆಟ್‌ ಎಸೆದ ದೃಶ್ಯಾವಳಿ ವ್ಯಾಪಕವಾಗಿ ಸಾಮಾಜಿಕ ತಾಣಗಳಲ್ಲಿ ಹರಿದಾಡಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
SCROLL FOR NEXT