ನವದೆಹಲಿ: ಜನ ಆಶೀರ್ವಾದ ಮಾಡಿದರೆ, ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆ ಸೃಷ್ಟಿಸಿದ ತಲ್ಲಣ ತಣ್ಣಗಾಗುವ ಮೊದಲೇ ಇದೀಗ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೊಸದೊಂದು ಚರ್ಚೆಗೆ ನಾಂದಿ ಹಾಡಿದ್ದಾರೆ.
ಸಿದ್ದಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಹಿರಿಯರಾದ ಸಚಿವ ಆರ್.ವಿ.ದೇಶಪಾಂಡೆ ಅವರೂ ಮುಖ್ಯಮಂತ್ರಿ ಆಗಬೇಕೆಂದು ಕೆಲವರು ಬಯಸುತ್ತಾರೆ. ಅದನ್ನು ಬೇರೆ ರೀತಿಯಲ್ಲಿ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ಗುರುವಾಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಬಳಿಕ ಕರ್ನಾಟಕ ಭವನಕ್ಕೆ ಆಗಮಿಸಿದ ಕುಮಾರಸ್ವಾಮಿಯವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ಕಂದಾಯ ಸಚಿವ ದೇಶಪಾಂಡೆ ಕೂಡ ದೆಹಲಿ ವಿಮಾನ ನಿಲ್ದಾಣದಿಂದ ನೇರವಾಗಿ ಕಾರಿನಿಂದ ಇಳಿದು ಬಂದು ಮುಖ್ಯಮಂತ್ರಿ ಜೊತೆಗೂಡಿದರು.
ಬಳಿಕ ಪತ್ರಕರ್ತರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿರುವ ಬಗ್ಗೆ ಕುಮಾರಸ್ವಾಮಿಯವರನ್ನು ಪ್ರಶ್ನೆ ಹೇಳಿದಾಗ, ಇದಕ್ಕೆ ಪ್ರತಿಕ್ರಿಯೆ ನೀಡಲು ಮುಂದಾದರು. ಕುಮಾರಸ್ವಾಮಿ ಪ್ರತಿಕ್ರಿಯಿಸುತ್ತಿದ್ದಂತೆಯೇ ದೇಶಪಾಂಡೆ ತಕ್ಷಣ ಮಧ್ಯಪ್ರವೇಶಿಸಿ ತಾವೇನೋ ಹೇಳಲು ಮುಂದಾದರು. ಆಗ ಕುಮಾರಸ್ವಾಮಿಯವರು ಈ ವಿಚಾರ ಪ್ರಸ್ತಾಪಿಸಿದರು.
ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ದೇಶಪಾಂಡೆಯವರು. ನನಗೆ ಅರ್ಹತೆ ಇದೆ. ಆದರೆ, ಅವಕಾಶ ಸಿಕ್ಕಿಲ್ಲ ಎಂಬ ಬಗ್ಗೆ ಬೇಸರವಿಲ್ಲ ಎಂದು ಹೇಳಿದರು.