ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಬರಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಯಾವೊಬ್ಬ ಸಚಿವರೂ ಭೇಟಿ ನೀಡಿ ಅಲ್ಲಿನ ಜನರ ಕಷ್ಟಗಳನ್ನು ಆಲಿಸಿಲ್ಲ. ಉತ್ತರ ಕರ್ನಾಟಕ ಪ್ರದೇಶವನ್ನು ನಿರ್ಲಕ್ಷಿಸಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕಿಡಿಕಾರಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿಗೆ ಹೋಗಿ ಭತ್ತ ನಾಟಿ ಮಾಡಿದಾಗ ರೈತರು ಮತ್ತು ರಾಜ್ಯದ ಜನರು ಸಂಭ್ರಮಿಸಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ರೈತ ಮುಖ್ಯಮಂತ್ರಿಗಳು ಎಂದು ಕೊಂಡಾಡಿದ್ದರು.
ನಾಟಿ ಮಾಡಿದ ಭತ್ತದ ಕೊಯಿಲಿಗೆ ಹೋಗಿದ್ದಾರೆ. ಇದನ್ನು ಗಮನಿಸಿದರೆ, ಸಿಎಂ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆನ್ನಿಸುತ್ತಿದೆ. ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ಕಡೆ ಗಮನಹರಿಸದೆ ಕೇವಲ ಒಂದು ಭಾಗಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂಬುದು ಮನವರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ತಾಯಿ ಸ್ಥಾನದಲ್ಲಿ ಇರಬೇಕೇ ಹೊರತು ಮಲತಾಯಿ ಸ್ಥಾನದಲ್ಲಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕ ಬಹಳಷ್ಟು ತಾಲೂಕುಗಳು ಬರದಿಂದ ತತ್ತರಿಸಿವೆ. ಜನರಿಗೆ ಕುಡಿಯಲು ನೀರು ಇಲ್ಲ. ಆದರೆ, ತಾವಾಗಲಿ ಅಥವಾ ತಮ್ಮ ಸಚಿವರಾಗಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಜನರ ಸಂಕಷ್ಟಗಳನ್ನು ಅರಿಯಲು ಯಾವುದೇ ಪ್ರಯತ್ನಗಳನ್ನೂ ನಡೆಸುತ್ತಿಲ್ಲ. ಭತ್ತ ನಾಟಿ ಮಾಡಿ ಕೊಯಿಲು ಮಾಡಿದ್ದೀರಿ. ಒಂದು ಭಾಗಕ್ಕೆ ನೀಡುವ ಪ್ರಾಮುಖ್ಯತೆಯನ್ನು ಉತ್ತರ ಕರ್ನಾಟಕ್ಕೆ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.
ಒಬ್ಬ ವ್ಯಕ್ತಿ ಒಂದು ಸಲ ತಮ್ಮ ನಿಲುವನ್ನು ಮತ್ತು ಮನಸ್ಥಿತಿಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದಾದ ಮೇಲೆ ಉತ್ತರ ಕರ್ನಾಟಕದ ಕುರಿತು ಚರ್ಚಿಸುವುದು ವ್ಯರ್ಥ ಎಂದು ಇದೇ ವೇಳೆ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos