ಹೊಳಲ್ಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದ್ದು, ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಇಂದು ಹೊಳಲ್ಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ನೆರವು ನೀಡಿಲ್ಲ ಎಂದು ಆರೋಪಿಸಿದ್ದಾರೆ. ಆದರೆ ಅವರಿಗೆ ಲೆಕ್ಕ ಕೊಡಲು ನಾನು ಇಲ್ಲಿಗೆ ಬಂದಿದ್ದೇನೆ. ಕರ್ನಾಟಕದ ವಿವಿಧ ಯೋಜನೆಗಳಿಗಾಗಿ ಕೇಂದ್ರ ಸರ್ಕಾರ ಒಟ್ಟು 3 ಲಕ್ಷ ಕೋಟಿ ರುಪಾಯಿ ನೀಡಿದೆ. ಆದರೆ ಈ ಹಣ ಎಲ್ಲಿ ಹೋಯ್ತು? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ನೀಡಿದ ಹಣಕಾಸಿನ ನೆರವು ಎಷ್ಟು ಹಣ ಹಳ್ಳಿಗಳಿಗೆ ತಲುಪಿದೆ ಹೇಳಿ? ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಶಾ, ಕೇಂದ್ರ ನೀಡಿದ ಹಣವನ್ನು ಕಾಂಗ್ರೆಸ್ ನವರು ನುಂಗಿ ನೀರು ಕುಡಿದಿದ್ದಾರೆ ಎಂದು ಆರೋಪಿಸಿದರು.
ಉಜ್ವಲ ಗ್ಯಾಸ್ ಯೋಜನೆ, ಮುದ್ರಾ ಯೋಜನೆ, ಸ್ವಚ್ಛ ಭಾರತ ಅಭಿಯಾನ ಮೊದಲಾದ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೊಟ್ಟ ಹಣದ ಬಹುಪಾಲನ್ನು ಕಾಂಗ್ರೆಸಿಗರು ನುಂಗಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 14ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 2,19, 506 ಕೋಟಿ ರುಪಾಯಿ ಕೊಟ್ಟಿದ್ದಾರೆ. 13ನೇ ಹಣಕಾಸು ಆಯೋಗದಲ್ಲಿ ಈ ಮೊತ್ತ ಬರೀ 88,583 ರುಪಾಯಿ ಇತ್ತು ಎಂದು ಅಮಿತ್ ಶಾ ಹೇಳಿದರು.
ಇದೇ ವೇಳೆ ಅರ್ಕಾವತಿ ಬಡಾವಣೆಯಲ್ಲಿನ ಹಗರಣ, ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲಿನ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ಎಲ್ಲವನ್ನೂ ಪ್ರಸ್ತಾಪಿಸಿ, ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos