ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಕೆ. ಮುರಳೀಧರ ರಾವ್
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಥಳೀಯ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳಿಗೆ ಮನ್ನಣೆ ನೀಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ. ಮುರಳೀಧರ ರಾವ್ ತಿಳಿಸಿದ್ದಾರೆ.
ಗೆಲ್ಲುವ ಅಭ್ಯರ್ಥಿಗಳನ್ನು ಸಮೀಕ್ಷೆ ಮೂಲಕ ಹುಡುಕುವುದಲ್ಲದೆ ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದರು. ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವ ಮುನ್ನ ಅಭ್ಯರ್ಥಿಗಳ ಮೌಲ್ಯಮಾಪನ ಮಾಡಲು ಬಿಜೆಪಿ ಮುಂದಾಗಿದೆ.
ಕಾಂಗ್ರೆಸ್ ಸರ್ಕಾರ ವಿರುದ್ಧ ರಾಜ್ಯದ ಕೃಷಿಕರ ಸಮಸ್ಯೆ ಮತ್ತು ಹಿಂದೂಗಳ ಹತ್ಯೆ ವಿಷಯನ್ನು ಎತ್ತಿಕೊಂಡು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಳ್ಳಿಗಳಲ್ಲಿ ಸಂಚರಿಸಿ ಅಲ್ಲಿನ ರೈತರ ಜೊತೆ ಚರ್ಚೆ ನಡೆಸಿ ಬಿಜೆಪಿ ಅಭಿಯಾನ ಹಮ್ಮಿಕೊಳ್ಳಲಿದೆ. ಇದರ ನಂತರ ಬಿಜೆಪಿ ರೈತರಿಗೆ ಕೃಷಿ ಪುನರ್ವಸತಿ ಘೋಷಣೆಯನ್ನು ಮಾಡಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯಯನವರು ಸಹಕಾರಿ ಬ್ಯಾಂಕುಗಳಲ್ಲಿ 50,000ಕ್ಕಿಂತ ಕಡಿಮೆ ಸಾಲ ಹೊಂದಿರುವವರ ಸಾಲ ಮನ್ನಾ ಘೋಷಣೆ ಮಾಡಿದ ನಂತರ ಸುಮಾರು 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಘೋಷಣೆ ಕೇವಲ ಕಣ್ಣೊರೆಸುವ ತಂತ್ರವಷ್ಟೆ. ರೈತರ ಕಷ್ಟಗಳನ್ನು ಚೆನ್ನಾಗಿ ಅರ್ಥೈಸಿಕೊಂಡಿರುವ ಬಿಜೆಪಿ ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಹೊಂದಿರುವ ರೈತರ ಸಾಲ ಮನ್ನಾ ಮಾಡಿದೆ ಎಂದು ಮುರಳೀಧರ ರಾವ್ ಹೇಳಿದರು.ಸಿದ್ದರಾಮಯ್ಯ ಸರ್ಕಾರ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಪರಿವರ್ತನಾ ಯಾತ್ರೆಯ ಸಮಾರೋಪ ಫೆಬ್ರವರಿ 4ರಂದು ನಡೆಯಲಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ ಎಂದು ಮುರಳೀಧರ ರಾವ್ ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos