ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಮನ್ವಯ ಸಮಿತಿಗೆ ನೂತನ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನೂ ಸೇರ್ಪಡೆ ಮಾಡುವಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ಕೋರಿದ್ದಾರೆಂಬ ಮಾತುಗಳು ಕೇಳಿ ಬರತೊಡಗಿವೆ.
ಪ್ರಸ್ತುತ ಸಮನ್ವಯ ಸಮಿತಿಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್, ಹೆಚ್.ಡಿ.ಕುಮಾರಸ್ವಾಮಿ, ಡ್ಯಾನಿಶ್ ಅಲಿ ಇದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಸ್ಥಾನ ಪಡೆಯಲಿದ್ದಾರೆಂದು ಹೇಳಲಾಗುತ್ತಿದೆ.
ದಿನೇಶ್ ಗುಂಡೂರಾವ್ ಅವರ ಸೇರ್ಪಡೆಯಿಂದ ಸಮಿತಿಯಲ್ಲಿ ಕಾಂಗ್ರೆಸ್ ಬಲ ಮತ್ತಷ್ಟು ಹೆಚ್ಚಾಗಲಿದೆ. ಇದನ್ನು ಸರಿತೂಗಿಸಲು ಜೆಡಿಎಸ್ ನಿಂದಲೂ ಮತ್ತೊಬ್ಬ ಸದಸ್ಯರನ್ನು ನೇಮಕ ಮಾಡಿಕೊಳ್ಳಲು ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ರೇವಣ್ಣ ಅವರನ್ನು ಸೇರ್ಪಡೆಗೊಳಿಸುವಂತೆ ಜೆಡಿಎಸ್ ಪ್ರಸ್ತಾಪವನ್ನು ಮುಂದಿಟ್ಟಿದೆ ಎಂದು ಮೂಲಗಳಿ ತಿಳಿಸಿವೆ.
ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು, ಉಪ ಮುಖ್ಯಮಂತ್ರಿಯಾಗಿ ಸಮಿತಿಯಲ್ಲಿ ಮುಂದುವರೆಯಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಪ್ರತಿನಿಧಿಯಾಗಿ ಕೆಪಿಸಿಸಿ ಅಧ್ಯಕ್ಷರಿಗೆ ಅವಕಾಶ ಕಲ್ಪಿಸಬೇಕಾಗಿರುವುದರಿಂದ ದಿನೇಶ್ ಗುಂಡೂರಾವ್ ಸ್ಥಾನ ಪಡೆಯಲಿದ್ದಾರೆ. ಸಮಿತಿಯಲ್ಲಿ ಉಂಟಾಗುವ ಅಸಮತೋಲನ ನಿವಾರಣೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos